ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಶೇ.60ರಷ್ಟು ಕಮಿಷನ್ ಆರೋಪ ಕೇಳಿ ಬಂದಿದ್ದು, ಈ ಆರೋಪವನ್ನೂ ಸೇರಿ ಎಸ್ಐಟಿ ತನಿಖೆ ನಡೆಸಬೇಕೆಂದು ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಶೇ40 ಕಮಿಷನ್ ಆರೋಪದ ತನಿಖೆಗೆ ಎಸ್ಐಟಿ ರಚಿಸಲು ತೀರ್ಮಾನಿಸಿದೆ. ಹಿಂದಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ್ದರು. ಅದರ ತನಿಖೆಗಾಗಿ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೂ ಗೊತ್ತಾಗಬೇಕು. ಹಾಗೆಯೇ, ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ಧ ಲೋಕೋಪಯೋಗಿ, ಅಬಕಾರಿ, ವಿದ್ಯುತ್ ಗುತ್ತಿಗೆದಾರರ ಸಂಘ ಮಾಡಿರುವ ಶೇ 60 ಕಮಿಷನ್ ಆರೋಪದ ಬಗ್ಗೆಯೂ ಎಸ್ಐಟಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.
‘ತಮ್ಮ ಸರ್ಕಾರದ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡಿದಾಗ ಮುಖ್ಯಮಂತ್ರಿಯಾಗಿದ್ದ ನಾನು ಇದೇ ಮಾತು ಹೇಳಿದ್ದೆ. ಯಾರೂ ದೂರು ಕೊಡಲಿಲ್ಲ. ಅವರ ಬಳಿ ದಾಖಲೆ ಇರಲಿಲ್ಲ ಎಂದು ಹೇಳಿದರು.
ಸರ್ಕಾರದ ಆರ್ಥಿಕ ಸ್ಥಿತಿ ಕುರಿತು ಮಾತನಾಡಿ, ಈ ಸರ್ಕಾರದ ಬಳಿಕ ಪೂರ್ಣಗೊಂಡ ಕಾಮಗಾರಿಗಳಿಗೆ ಪಾವತಿಸಲು ಹಣವಿಲ್ಲ. ಹೀಗಾಗಿ ಟೆಂಡರ್ ನೀಡಿದ್ದರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಗುತ್ತಿಗೆದಾರರು ಹಿಂಜರಿಯುತ್ತಿದ್ದಾರೆ ಎಂದು ತಿಳಿಸಿದರು.