ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ನಂದಿನಿ ಬ್ರ್ಯಾಂಡ್ ಅನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಟೀಕಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಒಂದು ಕಡೆ ಹಾಲು ಉತ್ಪಾದಕರಿಗೆ ನೂರಾರು ಕೋಟಿ ಬಾಕಿ ಉಳಿಸಿಕೊಂಡಿದೆ. ಮತ್ತೊಂದು ಕಡೆ ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ ನಂದಿನಿ ಬ್ರ್ಯಾಂಡ್ ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶ, ಎಂ.ಕೆ.ಜಗದೀಶ್ ಅವರನ್ನ ದಿಢೀರನೆ ವರ್ಗಾವಣೆ ಮಾಡಿದೆ ಎಂದು ಹೇಳಿದ್ದಾರೆ.
ಈಗ ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಡೈರಿ ಮಳಿಗೆಗಳನ್ನು ಸ್ಥಾಪಿಸಲು ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಲೂ ಯಾರೂ ಆಸಕ್ತಿ ತೋರುತ್ತಿಲ್ಲ. ಇದು ನಂದಿನಿ ಬ್ರ್ಯಾಂಡ್ ಪರಿಸ್ಥಿತಿಯಾಗಿದೆ. ನಾಡಿನ ರೈತರು, ನಿಷ್ಠಾವಂತ ಗ್ರಾಹಕರು ಕಷ್ಟಪಟ್ಟು ಕಟ್ಟಿರುವ ನಂದಿನಿ ಬ್ರ್ಯಾಂಡ್ ಅನ್ನ ಸರ್ವನಾಶ ಮಾಡಲು ಸಿದ್ದರಾಮಯ್ಯ ಅವರು ಶಪಥ ಮಾಡಿದಂತಿದೆ ಎಂದಿದ್ದಾರೆ.