ಬಳ್ಳಾರಿ : ಬಳ್ಳಾರಿ ವಿವಿಯ ಕುಲಪತಿಗಳಾಗಿದ್ದ ಸಿದ್ದು ಪಿ ಅಲಗೂರು ಅವರು ನಿವೃತ್ತಿ ಹೊಂದಿದ ನಂತರ ಸರಿ ಸುಮಾರು ಎಂಟು ತಿಂಗಳ ಕಾಲ ಪ್ರಭಾರಿ ಕುಲಪತಿಗಳೇ ಆಡಳಿತ ನಡೆಸುತ್ತಿದ್ದರು. ಈ ಸ್ಥಾನ ಭರ್ತಿ ಮಾಡಲು ಇದೀಗ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ ಎಂ ಮೇತ್ರಿ ಅವರು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ನೇಮಕಗೊಂಡಿದ್ದಾರೆ.
ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಾ. ಮೇತ್ರಿ ಅವರನ್ನು ನಾಲ್ಕು ವರ್ಷಗಳ ಅವಧಿಗೆ ವಿ.ಎಸ್.ಕೆ. ವಿವಿಯ ಕುಲಪತಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಕಲ್ಯಾಣ ಕರ್ನಾಟಕದ ಬೀದರ್ ಮೂಲದ ಡಾ ಕೆ ಎಂ ಮೇತ್ರಿ ಅವರು ಕಳೆದ ಎರಡೂವರೆ ದಶಕಗಳಿಂದ ಹಂಪಿ ಕನ್ನಡ ವಿವಿಯ ಪ್ರಾಧ್ಯಾಪಕರಾಗಿ, ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾಗಿ, ಡೀನ್ ರಾಗಿ ಕಾರ್ಯನಿರ್ವಹಿಸಿದ್ದಾರೆ. ವಿವಿಯ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.