ವಿಧಾನಸಭಾ ಅಧಿವೇಶನದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಕುರಿತು ಯಾವುದೇ ಕ್ರಮ ಕೈಗೊಳ್ಳದಿರುವುದು. ರಾಜ್ಯದ ಯುವಜನರಿಗೆ ತೀವ್ರ ನಿರಾಶೆಯನ್ನುಂಟು ಮಾಡಿದೆ. ದುಡಿಯಲು ತುದಿಗಾಲಲ್ಲಿ ನಿಂತಿರುವ ಯುವಜನತೆಗೆ ಉದ್ಯೋಗ ಖಾತ್ರಿಪಡಿಸದ ಈ ಬಜೆಟ್ ನ್ನು ಡಿವೈಎಫ್ಐ ಬಳ್ಳಾರಿ ಜಿಲ್ಲಾ ಸಮಿತಿಯು ಖಂಡಿಸುತ್ತದೆ.

ರಾಜ್ಯದಲ್ಲಿ ಎರಡೂವರೆ ಲಕ್ಷ ಹುದ್ದೆಗಳು ಖಾಲಿಯಿದ್ದು ಅವುಗಳ ಭರ್ತಿ ಮಾಡಲು ಹಾಗೂ ಆದ್ಯತಾ ಕ್ಷೇತ್ರವಾರು ಉದ್ಯೋಗ ಸೃಷ್ಟಿ ಮಾಡುವ ದಿಸೆಯಲ್ಲಿ ಬಜೆಟ್ ಯಾವುದೇ ಚಕಾರ ಎತ್ತದಿರುವುದು ಯುವಜನರನ್ನು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಯುವನಿಧಿ ಯೋಜನೆ ಜಾರಿಗೆ ಸರಕಾರ ಮುಂದಾಗಿರುವುದು ಸ್ವಾಗತಾರ್ಹ ಕ್ರಮವಾಗಿದೆಯಾದರೂ, ಕೇವಲ ಹಿಂದಿನ ವರ್ಷ ಉತ್ತೀರ್ಣರಾದವರಿಗೆ ಈ ಯೋಜನೆಯನ್ನು ಅನ್ವಯಿಸಿರುವುದರಿಂದ, ಪದವಿ ಮುಗಿಸಿ ಐದು-ಹತ್ತು ವರ್ಷಗಳಿಂದ ಕೆಲಸ ಸಿಗದ ನಿರುದ್ಯೋಗಿಗಳಿಗೆ ಇದರಿಂದ ಯಾವುದೇ ಆಸರೆ ಸಿಗುವುದಿಲ್ಲ. ಸರಕಾರ ಇದನ್ನು ಪರಿಷ್ಕರಿಸಬೇಕು.
ರಾಜ್ಯದಲ್ಲಿ ಶಾಲೆ, ಕಾಲೇಜು ಹಾಗೂ ವಿವಿಧ ಇಲಾಖೆಗಳಲ್ಲಿ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು, ಗುತ್ತಿಗೆ, ಹೊರಗುತ್ತಿಗೆ ಇತ್ಯಾದಿ ಹೆಸರಿನಲ್ಲಿ ನೌಕರರು ಸೇವೆಸಲ್ಲಿಸುತ್ತಿದ್ದು ಅವರ ಖಾಯಮಾತಿಗೆ ಯಾವುದೇ ಕ್ರಮವನ್ನು ಕೈಗೊಳ್ಳದ ನಿರಾಶಾದಾಯಕ ಬಜೆಟ್ ಆಗಿದೆ. ಸರಕಾರ ತಾನು ಘೋಷಿಸಿದ ಐದು ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮತ್ತು ರಾಜಸ್ವ ಸಂಗ್ರಹದಲ್ಲಿ ಹೆಚ್ಚಳ ಸಾಧಿಸುವ ತರಾತುರಿಯಲ್ಲಿ ಸ್ಟ್ಯಾಂಪಿಗ್, ದ್ವಿಚಕ್ರ ಮತ್ತು ಇತರ ವಾಣಿಜ್ಯ ವಾಹನಗಳ ಹಾಗೂ ಅಬಕಾರಿ ಮೇಲಿನ ತೆರಿಗೆ ಏರಿಕೆ ಮಾಡಿರುವುದು ಒಂದು ಕೈಯಲ್ಲಿ ನೀಡಿ ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಕ್ರಮವಾಗಿದೆ ಎಂದುರು.