ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಶಾಕ್ ನೀಡುವ ಸುದ್ದಿಯೊಂದು ಇಂದು ಬೆಳಗ್ಗೆಯೇ ಹೊರಬಿದ್ದಿದ್ದು, ಖ್ಯಾತ ನಟ ಹಾಗೂ ನಿರ್ಮಾಪಕ Dileep Raj ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.
ಇಂದು ನಸುಕಿನ ಜಾವ ಮನೆಯಲ್ಲಿ ಇದ್ದಾಗಲೇ ದಿಲೀಪ್ ರಾಜ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ದಿಲೀಪ್ ರಾಜ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ನಿರ್ದೇಶಕರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕಂಬನಿ ಮಿಡಿದಿದ್ದಾರೆ. ಅವರ ಅಕಾಲಿಕ ನಿಧನ ಸ್ಯಾಂಡಲ್ವುಡ್ನಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.
2005ರಲ್ಲಿ ಬಿಡುಗಡೆಯಾದ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ನಾಯಕ ನಟನಾಗಿ ಚಿತ್ರರಂಗ ಪ್ರವೇಶಿಸಿದ್ದ ದಿಲೀಪ್ ರಾಜ್, 2007ರಲ್ಲಿ Puneeth Rajkumar ಅಭಿನಯದ ‘ಮಿಲನ’ ಚಿತ್ರದ ಬಳಿಕ ಹೆಚ್ಚು ಜನಪ್ರಿಯತೆ ಗಳಿಸಿದರು. ಬಳಿಕ ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಇತ್ತೀಚೆಗೆ ಬಿಡುಗಡೆಯಾಗಿದ್ದ ‘ಲವ್ ಮಾಕ್ಟೇಲ್ 3’ ಚಿತ್ರದ ಮೂಲಕ ಮತ್ತೆ ಗಮನ ಸೆಳೆದಿದ್ದರು. ಈ ಚಿತ್ರವನ್ನು Darling Krishna ನಿರ್ದೇಶಿಸಿದ್ದರು.
ಚಿತ್ರರಂಗದ ಜೊತೆಗೆ ಕಿರುತೆರೆಯಲ್ಲೂ ದಿಲೀಪ್ ರಾಜ್ ಅಪಾರ ಜನಪ್ರಿಯತೆ ಪಡೆದಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿನ ಅವರ ಅಭಿನಯ ಮನೆಮಾತಾಗಿತ್ತು. ಜೊತೆಗೆ ‘ಪಾರು’ ಮತ್ತು ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ನಿರ್ಮಿಸಿ ನಿರ್ಮಾಪಕರಾಗಿಯೂ ಯಶಸ್ಸು ಕಂಡಿದ್ದರು.
ಅವರ ನಿಧನದ ಬಳಿಕ ಇನ್ಸ್ಟಾಗ್ರಾಂನಲ್ಲಿ ಅವರು ಕೊನೆಯದಾಗಿ ಹಂಚಿಕೊಂಡಿದ್ದ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಭಾವುಕ ನಮನ ಸಲ್ಲಿಸುತ್ತಿದ್ದಾರೆ. 2025ರ ಜನವರಿಯಲ್ಲಿ ತಮ್ಮ ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಚಿತ್ರದ ಪೋಸ್ಟರ್ ಹಂಚಿಕೊಂಡಿದ್ದ ಅವರು, ಸಿನಿಮಾಗೆ ಉತ್ತಮ ವಿಮರ್ಶೆಗಳು ಬಂದಿದ್ದರೂ ಪ್ರೇಕ್ಷಕರ ಸೆಳೆಯುವಲ್ಲಿ ಚಿತ್ರ ವಿಫಲವಾಗಿತ್ತು.
ದಿಲೀಪ್ ರಾಜ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಮತ್ತೊಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತಾಗಿದೆ.



