ದೇವನಹಳ್ಳಿ,ಜನವರಿ,28 : ಗ್ರಾಮದಲ್ಲಿ ಸುಸಜ್ಜಿತವಾದ ಶಾಲಾ ಕಟ್ಟಣ ನಿರ್ಮಾಣಕ್ಕೆ ಸಹಕಾರ ನೀಡಿ ಅಭಿವೃದ್ಧಿ ಕೆಲಸಕ್ಕೆ ಕೈ ಜೋಡಿಸಿದ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಸಮೀಪದ ನಾರಾಯಣಪುರ ಗ್ರಾಮದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಸಿ.ಎಸ್.ಆರ್ ವಿಶೇಷ ಅನುದಾನದಲ್ಲಿ ನಿರ್ಮಿಸಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ,ಮುಂದಿನ ಒಂದು ವರ್ಷದಲ್ಲಿ ತಾಲ್ಲೂಕಿನಲ್ಲಿ ಯಾವುದೇ ಕಾಮಗಾರಿ ಗಳು ಬಾಕಿ ಇಲ್ಲದಂತೆ ಸರ್ಕಾರದಿಂದ ಸಿಗುವ ಎಲ್ಲ ಅನುದಾನಗಳು ಸಿಗುವಂತೆ ಸಹಾಯಹಸ್ತ ಚಾಚಿದ್ದೇನೆ.

ಜಲಜೀವನ್ ಯೋಜನೆಯಿಂದ ಇನ್ನು 45 ಕೋಟಿ ರೂ ಬರಲಿದ್ದು, ಪ್ರತಿ ಮನೆ ಮನೆಗೂ ಕೊಳಾಯಿ ಕೊಡುವ ವಿಚಾರವೂ ನನ್ನ ಅವಧಿಯಲ್ಲಿ ಆಗುತ್ತಿದೆ. ಇದಕ್ಕೆ ಡಿಪಿಆರ್ ಅನುಮೋದನೆ ನೀಡಿದ್ದು, ಹಲವು ಗ್ರಾಮಗಳಲ್ಲಿ ಸರ್ವೇ ಕಾರ್ಯವೂ ಆರಂಭವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಆನಂದಮ್ಮ, ನಾರಾಯಣಪುರ ಸರ್ಕಾರಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಸುಧಾಕರ್, ಮಾಜಿ ಶಾಸಕ ಮುನಿನರಸಿಂಹಯ್ಯ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮುನೇಗೌಡ, ಪ್ರಧಾನ ಕಾರ್ಯದರ್ಶಿ ರವೀಂದ್ರ ಹಾಗೂ ಇನ್ನು ಹಲವು ಮುಖಂಡರು ಇದ್ದರು.