ದೇವನಹಳ್ಳಿ: ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಫಲಿತಾಂಶ ಪ್ರಕಟ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಸಂಬಂಧ ದೇವನಹಳ್ಳಿ ಪಟ್ಟಣದ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಸ್ಥಾಪಿಸಲಾದ ಮತ ಎಣಿಕೆ ಕೇಂದ್ರದಲ್ಲಿ, ಇಂದು ಮತ ಎಣಿಕೆ ಕಾರ್ಯ ನಡೆದಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ರವಿ ಅವರು 2262 ಮತಗಳನ್ನು ಪಡೆದಿದ್ದಾರೆ. ಜನತಾದಳ(ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಹೆಚ್.ಎಮ್.ರಮೇಶ್ಗೌಡ ಅವರು 1540 ಮತಗಳನ್ನು ಪಡೆದಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ.ಸಿ.ನಾರಾಯಣಸ್ವಾಮಿ ಅವರು 54 ಮತಗಳನ್ನು ಪಡೆದಿದ್ದಾರೆ. ಒಟ್ಟು ಮತಗಳ ಸಂಖ್ಯೆ 3912 ರ ಪೈಕಿ 3856 ಸಿಂಧುವಾದ ಮತಗಳು. 56 ಅಸಿಂಧುವಾದ ಮತಗಳು. ಅಭ್ಯರ್ಥಿಯು ಗೆಲ್ಲಲು ಅವಶ್ಯವಿದ್ದ ಮತಗಳ ಸಂಖ್ಯೆ: 1929. ನಮ್ಮ ಕಾಂಗ್ರೆಸ್ ಪಕ್ಷದ ಚುನಾಯಿತ ಜನಪ್ರತಿನಿಧಿಗಳ ಜೊತೆಯಲ್ಲಿ ಅನ್ಯ ಪಕ್ಷದ ಜನಪ್ರತಿನಿಧಿಗಳು ನಮ್ಮ ಮೇಲಿನ ವಿಶ್ವಾಸಕ್ಕೆ ನಿರೀಕ್ಷೆಗಿಂತ ಅಧಿಕ ಮತ ನೀಡಿ ನನ್ನನ್ನು ಆಯ್ಕೆ ಮಾಡಿದ್ದಾರೆ ಇದರೊಂದಿಗೆ ಮುಂದಿನ ದಿನಗಳಲ್ಲಿ ರಾಜ್ಯ ಸುಭಿಕ್ಷವಾಗಿರಬೇಕಾದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೆನ್ನುವ ಸಂಕಲ್ಪದೊಂದಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ನವರ ಮಾರ್ಗದರ್ಶನದಲ್ಲಿ 2023 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಆಶೀರ್ವಾದೊಂದಿಗೆ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿ ಸುಭದ್ರ ಸರ್ಕಾರ ನಡೆಸಲಿದೆ ಎಂದು ವಿಧಾನ ಪರಿಷತ್ ನೂತನ ಸದಸ್ಯ ಎಸ್.ರವಿ ತಿಳಿಸಿದರು.
ಈ ಸಂದರ್ಭದಲ್ಲಿ ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಉಪಾಧ್ಯಕ್ಷ ಶಾಂತಕುಮಾರ್, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನಾಗೇಶ್, ಮುಖಂಡರಾದ ಜಗನ್ನಾಥ್, ರಘು, ಗೋಪಾಲಕೃಷ್ಣ, ಇನ್ನು ಹಲವರು ಇದ್ದು ಅಭಿನಂದಿಸಿದರು.