ಬೆಂಗಳೂರು: ಲೋಕಸಭಾ ಚುನಾವಣೆ ನಡೆಯುತ್ತಿರುವ ಹೊತ್ತಿನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿರುವಾಗಲೇ ಬಿಜೆಪಿ ಹೈಕಮಾಂಡ್ ಎಚ್ಚರಿಕೆ ನಡೆ ಇಟ್ಟಿದ್ದು, ಮಿತ್ರ ಪಕ್ಷ ಜೆಡಿಎಸ್ಗೆ ಈ ವಿಚಾರದಲ್ಲಿ ನಮ್ಮ ಸಹಕಾರ, ಸಹಾಯ ಇಲ್ಲ. ಎಸ್ಐಟಿ ವಿಚಾರಣೆಗೆ ಒಳಗಾಗಿ ಕಾನೂನು ಹೋರಾಟ ಮಾಡಿಕೊಳ್ಳಿ ಎಂಬ ಖಡಕ್ ಸಂದೇಶವನ್ನು ರವಾನಿಸಿದೆ.
ನಿನ್ನೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ನಡೆಸಿದ ಅಮಿತ್ ಶಾ ಅವರು ಬಿಜೆಪಿ ವರಿಷ್ಠರ ಜತೆ ದೂರವಾಣಿಯಲ್ಲಿ ಮಾತನಾಡಿ, ಈ ಪ್ರಕರಣದ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟ. ಮಹಿಳೆಯರಿಗೆ ಅನ್ಯಾಯ, ಅಗೌರವ ಆಗುವುದನ್ನು ನಾವು ಸಹಿಸಲ್ಲ. ನಮ್ಮದೇನಿದ್ದರೂ ಚುನಾವಣಾ ಹೊಂದಾಣಿಕೆ ಅಷ್ಟೇ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ಈ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಕಾನೂನು ವ್ಯಾಪ್ತಿಯಲ್ಲಿ ಎಲ್ಲವನ್ನು ಬಗೆಹರಿಸಿಕೊಳ್ಳಿ. ಎಸ್ಐಟಿ ವಿಚಾರಣೆಗೆ ಹಾಜರಾಗಲು ಮೊದಲು ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳಿ ಎಂಬ ಮಾತನ್ನು ಬಿಜೆಪಿ ವರಿಷ್ಠರು ಹೇಳಿದ್ದಾರೆ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮಹಿಳೆಗೂ ಅನ್ಯಾಯವಾಗಲು ನಾವು ಬಿಡಲ್ಲ. ಈ ಪ್ರಕರಣದ ತನಿಖೆಯಾಗಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂಬ ಮಾತನ್ನು ಬಿಜೆಪಿ ನಾಯಕರು ಈಗಾಗಲೇ ಹೇಳಿದ್ದರು.