ಬೆಂಗಳೂರು: ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ನ.1ರಿಂದ ಮುಂದಿನ ವರ್ಷ 2024ರ ನವೆಂಬರ್ 30ರವರೆಗೆ ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸ ಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕನ್ನಡ ಧ್ವಜಾರೋಹಣ ಮಾಡಲಿದ್ದು, ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರು ಕನ್ನಡ ಧ್ವಜ ವಂದನೆ ನೆರವೇರಿಸಲಿದ್ದಾರೆ. ನಾಡಿನ ಎಲ್ಲ ಕನ್ನಡಿಗರು, ಕನ್ನಡ ಮನಸ್ಸುಗಳು, ಕನ್ನಡ ಪರ ಹೋರಾಟಗಾರರು ಈ ಸಂಭ್ರಮದಲ್ಲಿ ತೊಡಗುವಂತಾಗಬೇಕು ಎಂದರು.
ರಾಜ್ಯೋತ್ಸವದಂದು ರಾಜ್ಯದ ಎಲ್ಲ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ, ಕರ್ನಾಟಕ ಸಂಭ್ರಮ-50 : ಉಸಿರಾಯಿತು ಕರ್ನಾಟಕ ಹೆಸರಾಗಲಿ ಕನ್ನಡ ಎನ್ನುವ ಘೋಷ ವಾಕ್ಯ ಬರೆಯಬೇಕು. ಬೆಳಗ್ಗೆ 9 ಗಂಟೆಗೆ ನಾಡಗೀತೆ ಮೊಳಗಲಿದೆ. ಸಂಜೆ 5 ಗಂಟೆಗೆ ನಿಮ್ಮ- ನಿಮ್ಮ ಊರುಗಳ ಮೈದಾನಗಳಲ್ಲಿ ಕೆಂಪು- ಹಳದಿ ಬಣ್ಣದ ಗಾಳಿಪಟಗಳನ್ನು ಬಾನೆತ್ತರಕ್ಕೆ ಹಾರಿಸಿ. ಈ ಗಾಳಿಪಟ ಉತ್ಸವದ ಮೂಲಕ ನಮ್ಮ ಸುವರ್ಣ ಸಂಭ್ರಮವನ್ನು ಜಗತ್ತಿಗೆ ಸಾರಿ ಹೇಳಲಾಗುವುದು. ರಾತ್ರಿ ಏಳು ಗಂಟೆಗೆ ಪ್ರತಿಯೊಬ್ಬರ ಮನೆ, ಕಚೇರಿ, ಅಂಗಡಿ ಮಳಿಗೆಗಳ ಮುಂದೆ ಹಣತೆಯಲ್ಲಿ ಕನ್ನಡ ಜ್ಯೋತಿ ಬೆಳಗಿಸಲಾಗುವುದು ಎಂದು ಹೇಳಿದರು.
ಇನ್ನು ಸಂಭ್ರಮದ ಪ್ರಯುಕ್ತ ಭವ್ಯ ಕರ್ನಾಟಕ ರಥಯಾತ್ರೆಯನ್ನು ಇಡೀ ವರ್ಷ ಪೂರ್ತಿ ನಾಡಿನ ಉದ್ದಗಲ ಸಂಚರಿಸುವಂತೆ ಯೋಜನೆ ರೂಪಿಸಲಾಗಿದೆ. ಕರ್ನಾಟಕ ಏಕೀಕಕರಣದ ವಿಷಯ, ಸಾಹಿತ್ಯ, ಸಾಧನೆಗಳ ಪಥ, ಐತಿಹಾಸಿಕ ನೆಲೆಗಳ ಮಾಹಿತಿ, ಕನ್ನಡ ಜ್ಯೋತಿ, ಭುವನೇಶ್ವರಿ ಪ್ರತಿಮೆ ಸಹಿತ ಕರ್ನಾಟಕದ ಎಲ್ಲಾ 31 ಜಿಲ್ಲೆಗಳ ಪರಿಚಯ ಮಾಡಿಕೊಡುವ ವಿಶೇಷ ಕರ್ನಾಟಕ ಪಾರಂಪರಿಕ ರಥಯಾತ್ರೆ ಎಲ್ಲಾ 31 ಜಿಲ್ಲೆಗಳ ಸಹಿತ ಎಲ್ಲಾ ತಾಲ್ಲೂಕು ಕೇಂದ್ರ, ಹೋಬಳಿ ಕೇಂದ್ರ ಹಾಗೂ ಮತ್ತು ಎಲ್ಲ ಗ್ರಾಮಗಳಲ್ಲೂ ಪರ್ಯಾಟನೆ ನಡೆಸಲಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ಅಲ್ಲದೆ, ರಾಜ್ಯಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ನನ್ನ ಭಾಷೆ, ನನ್ನ ಹಾಡು ಪ್ರಬಂಧ ಸ್ಪರ್ಧೆ, ರಸ ಪ್ರಶ್ನೆ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವುದು. ಶಾಲೆಗಳು, ವಲಯಮಟ್ಟ, ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟ, ನಾಲ್ಕು ಕಂದಾಯ ವಿಭಾಗಗಳು ಮತ್ತು ರಾಜ್ಯ ಮಟ್ಟದಲ್ಲಿ ಸ್ಪರ್ಧೆಗಳು ನಡೆಯಲಿವೆ. ಕನ್ನಡ ಭಾಷೆ, ಕರ್ನಾಟಕ ರಾಜ್ಯದ ಕುರಿತು ಮಕ್ಕಳಲ್ಲಿ ಅಭಿಮಾನ ಮೂಡಿಸಬೇಕು ಎಂಬುದು ಇದರ ಹಿಂದಿನ ಆಶಯ ಎಂದರು.
ಸಭೆಯಲ್ಲಿ ಅರ್ಥ ಪೂರ್ಣವಾಗಿ ಕಾರ್ಯಕ್ರಮ ಆಗುವ ಬಗ್ಗೆ ತಮ್ಮ ಜಿಲ್ಲೆಗಳಲ್ಲಿ ರಥಯಾತ್ರೆ ಹಾಗೂ ಜ್ಯೋತಿ ಬಂದಾಗ ಮಾಡಬೇಕಾದ ಕೆಲಸಗಳ ಬಗ್ಗೆ ಸೂಚನೆ ನೀಡಿಕೆ. ಎಲ್ಲಾ ಜಿಲ್ಲೆಗಳ ಸ್ಥಳೀಯ ಕಲಾಪ್ರಕಾರ, ಸ್ಥಳೀಯ ಕಲಾವಿದರು ಹಾಗೂ ಕಲಾ ತಂಡಗಳನ್ನು ಬಳಸಿಕೊಳ್ಳಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಕಲಾ ಪ್ರಕಾರಗಳನ್ನು ಹಳೇ ಮೈಸೂರು ಭಾಗಕ್ಕೆ ಇಲ್ಲಿನ ಕಲಾ ಪ್ರಕಾರಗಳನ್ನು ಆ ಭಾಗಕ್ಕೆ ಕೊಂಡೊಯ್ಯುವ ಕೆಲಸ ಪ್ರಯತ್ನ ನಡೆಯಲಿದೆ. ಕನ್ನಡ ಸಾಂಸ್ಕೃತಿಕ ಲೋಕದ ಸಾಂಸ್ಕೃತಿಕ ಹಬ್ಬ. ಕನ್ನಡದ ಸೊಗಡನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶ ನಮ್ಮದಾಗಿದೆ.

ಈ ಸಂಭ್ರಮದಲ್ಲಿ ಐಟಿ- ಬಿಟಿ ಕಂಪನಿಗಳ ಉದ್ಯೋಗಿಗಳು ಕರ್ನಾಟಕ ಸಂಭ್ರಮದ ಭಾಗವಾಗಲಿದ್ದು, ಅವರೊಂದಿಗೂ ಚರ್ಚೆ ನಡೆಸಲಾಗಿದೆ. ಅವರ ಕಚೇರಿಗಳಲ್ಲಿ ಕನ್ನಡದ ಕಂಪು ಕುರಿತು ಕಾರ್ಯಕ್ರಮ ಆಯೋಜಿಸಲಾಗುವುದು. ನವೆಂಬರ್ 1 ರಂದು ಕನ್ನಡ ಗೀತೆಗಳ ಗಾಯನ ಏರ್ಪಡಿಸಿದ್ದು, ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕ್ ಅವರ ಹೊತ್ತಿತ್ತೋ ಹೊತ್ತಿತ್ತು ಕನ್ನಡದ ದೀಪ. ಚೆನ್ನವೀರ ಕಣಿವೆಯವರ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಾಗುತ್ತಿದೆ ಎಂದು ಹೇಳಿದರು.

ಅಂಚೆ ಇಲಾಖೆಯ ಮೂಲಕ ವಿಶೇಷ ಅಂಚೆ ಚೀಟಿ ಹೊರ ತರುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಕರ್ನಾಟಕದ ಏಕೀಕರಣದ ವಿಷಯ, ನಂತರ ಸಾಧನೆಗಳ ಪಥ, ಐತಿಹಾಸಿಕ ನೆಲೆಗಳು ಸೇರಿದಂತೆ ಮುಂತಾದ ವಿಷಯಗಳ ಬಗ್ಗೆ ಸಾಕ್ಷ್ಯ ಚಿತ್ರ ರಚಿಸುವುದು. ಬೆಂಗಳೂರಿನಲ್ಲಿ ಭುವನೇಶ್ವರಿ ಪ್ರತಿಮೆ ನಿರ್ಮಾಣ, ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಪ್ರತಿಮೆ ನಿರ್ಮಾಣ ಹಾಗೂ ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರದಲ್ಲಿರುವ ರಾಜ್ಯದ ಏಕೈಕ ಭುವನೇಶ್ವರಿ ಪ್ರತಿಮೆ ಜೀರ್ಣೋದ್ಧಾರ ಮಾಡುವ ಜೊತೆಗೆ 50 ಸಾಧಕ ಮಹಿಳೆಯರಿಗೆ ಸನ್ಮಾನ. ಕರ್ನಾಟಕ ಏಕೀಕರಣದಿಂದ ಇಲ್ಲಿಯವರೆಗಿನ ಸಮಗ್ರ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಕಲೆ, ಸಾಹಿತ್ಯ, ಜಾನಪದ, ಸಂಸ್ಕೃತಿ ಕುರಿತು 50 ಪುಸ್ತಕ ಬಿಡುಗಡೆ ಮಾಡುತ್ತಿದ್ದು, 31 ಜಿಲ್ಲೆಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ. ಕರ್ನಾಟಕ ಶಾಶ್ವತ ನಿಧಿ ತೆರೆಯಲಾಗುವುದು. ಸದರಿ ನಿಧಿಯಿಂದ ಸಂಗ್ರಹವಾದ ಅನುದಾನದಿಂದ ಗಡಿನಾಡು ಶಾಲೆಗಳ ಅಭಿವೃದ್ಧಿ ಮುಂತಾದ ಕನ್ನಡ ಚಟುವಟಿಕೆಗಳಿಗೆ ಬಳಕೆ. ಸರ್ಕಾರದ ಲೆಟರ್ ಹೆಡ್ ನಲ್ಲಿ ಕರ್ನಾಟಕ ಸಂಭ್ರಮ –50 ಎಂಬ ಲಾಂಛನ ಇರಲಿದೆ ಎಂದರು.