ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಸ್ಥರಿಗೆ ತಲಾ ರೂ.1 ಕೋಟಿ ಪರಿಹಾರ ಚೆಕ್ ವಿತರಣೆ

ಬೆಂಗಳೂರು: ಸಾರಿಗೆ ಹಾಗೂ ಮುಜರಾಯಿ ಸಚಿವರು ಮತ್ತು ಕರಾರಸಾ ನಿಗಮದ ನಿಗಮದ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿ ಹಾಗೂ ಅವರ ಅವಲಂಭಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಯೋಜನೆಯಡಿ ರೂ.1 ಕೋಟಿ ಅಪಘಾತ ಪರಿಹಾರ ವಿಮೆಯ ಚೆಕ್ ನೀಡುವ ಕಾರ್ಯಕ್ರಮ ಆಯೋಜಿಸಿದ್ದರು.

          ಕೆ.ಎಸ್.ಆರ್.ಟಿ.ಸಿ ಯು ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ತನ್ನ ಸಿಬ್ಬಂದಿಗಳಿಗೆ ರೂ.1 ಕೋಟಿ ಮೊತ್ತದ ಅಪಘಾತ ವಿಮೆಯನ್ನು ( On duty & Off Duty ಅಪಘಾತ)  ಜಾರಿಗೊಳಿಸಿದೆ. ಈ ಯೋಜನೆಯಲ್ಲಿ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂ ರಹಿತ ರೂ 50 ಲಕ್ಷಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ರವರಿಂದ ವಾರ್ಷಿಕ ರೂ.885/- ಪ್ರೀಮಿಯಂ (ನೌಕರರಿಂದ) ಪಾವತಿಯ ಮೇರೆಗೆ ರೂ.50 ಲಕ್ಷಗಳ ವಿಮೆಯು ಒಳಗೊಂಡಿರುತ್ತದೆ.

 

ಈ ಯೋಜನೆಯಡಿಯಲ್ಲಿ ಸಿಬ್ಬಂದಿಗಳು ಕರ್ತವ್ಯದ ಮೇಲಿದ್ದಾಗ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಗೂ ಸಹ ಈ ವಿಮಾ ಸೌಲಭ್ಯ ಅನ್ವಯಿಸುತ್ತದೆ. 

1.       ಈ ಯೋಜನೆಯ ಜಾರಿಯ ನಂತರದಲ್ಲಿ ಕೆ.ಎಸ್.ಆರ್.ಟಿ.ಸಿ. ಯ ಚಾಲನಾ ಸಿಬ್ಬಂದಿಗಳಾದ ಜಿ.ವಿ.ಚಲಪತಿ, 41 ವರ್ಷ, ಚಾಲಕ-ಕಂ-ನಿರ್ವಾಹಕರು, ಬಿಲ್ಲೆ ಸಂಖ್ಯೆ 7275, ಘಟಕ-6, ಬೆಂಗಳೂರು ಕೇಂದ್ರೀಯ ವಿಭಾಗರವರು ನಿಗಮದಲ್ಲಿ 11 ವರ್ಷಗಳ ಸೇವೆ ಸಲ್ಲಿಸಿರುತ್ತಾರೆ.

 

ದಿನಾಂಕ 29/01/2023 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಫಘಾತ ಸಂಭವಿಸಿ ಮೃತಪಟ್ಟಿರುತ್ತಾರೆ. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ. ವಿಮಾ ಪರಿಹಾರ ರೂ.1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ ರೂ.17.21 ಲಕ್ಷ ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ ರೂ.12.71 ಲಕ್ಷ ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ ರೂ. 4.50 ಲಕ್ಷವನ್ನು ಮೃತ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿ ಪಾವತಿಯಾಗಲಿದೆ.   

2        ಪಿ.ಎನ್. ನಾಗರಾಜು, 52 ವರ್ಷ, ಚಾಲಕ-ಕಂ-ನಿರ್ವಾಹಕರು, ಬಿಲ್ಲೆ ಸಂಖ್ಯೆ. 1173, ಘಟಕ-2, ಹಾಸನ ವಿಭಾಗ ರವರು ನಿಗಮದಲ್ಲಿ 17 ವರ್ಷಗಳ ಸೇವೆ ಸಲ್ಲಿಸಿರುತ್ತಾರೆ.

ದಿನಾಂಕ 01/02/2023 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಮರಣ ಹೊಂದಿರುತ್ತಾರೆ. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ. ವಿಮಾ ಪರಿಹಾರ ರೂ.1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ ರೂ.21.94 ಲಕ್ಷ ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ ರೂ.16.19 ಲಕ್ಷ ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ ರೂ. 5.75 ಲಕ್ಷ ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ‌ ಶೀಘ್ರದಲ್ಲಿಯೇ ಪಾವತಿಯಾಗಲಿದೆ. 

 

ಸಾರಿಗೆ ಹಾಗೂ ಮುಜರಾಯಿ ಸಚಿವರು ಮತ್ತು ಅಧ್ಯಕ್ಷರು, ಕರಾರಸಾ ನಿಗಮ ಅವರು ಈ ಎರಡು ಚಾಲನಾ ಸಿಬ್ಬಂದಿಗಳ ಕುಟುಂಬ ವರ್ಗದವರಿಗೆ ಅಪಘಾತ ಪರಿಹಾರ ವಿಮಾದ ತಲಾ ರೂ.1 ಕೋಟಿಗಳ ಚೆಕ್‌  ವಿತರಿಸಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿ, ಮೃತಪಟ್ಟ ಚಾಲನಾ ಸಿಬ್ಬಂದಿಗಳನ್ನು ಮರಳಿ ತರಲು ಸಾಧ್ಯವಿಲ್ಲ.  ಆದರೆ, ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದ್ದು, ಈ ಯೋಜನೆಯನ್ನು ಸಧ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕೂಡಲೇ  ಕ್ರಮ ಜರುಗಿಸಲು ಸೂಚಿಸುವುದಾಗಿ ತಿಳಿಸಿದರು. 

ಕುಟುಂಬದವರು ಹಣವನ್ನು‌ ಬ್ಯಾಂಕಿನಲ್ಲಿ ಸ್ಥಿರ ಠೇವಣಿಯನ್ನು  ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು.  ಅನುಕಂಪ‌‌ ಆಧಾರದ‌ ಮೇಲಿನ‌ ಕೆಲಸಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದರು. ನಿಗಮದ ಸಿಬ್ಬಂದಿಗಳ ಹಾಗೂ ಕುಟುಂಬದವರ  ಹಿತಾಸಕ್ತಿ ಕಾಪಾಡಲು ನಾವು ನಿಮ್ಮೊಡನೆ  ಸದಾ ಇರುವುದಾಗಿ ತಿಳಿಸಿದರು. 

ಈ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಮಾತನಾಡಿ , ಸಾರಿಗೆ ಸಚಿವರು ಆದೇಶಿಸಿರುವಂತೆ ಕೂಡಲೇ ಅನುಕಂಪ ಆಧಾರದ ಮೇಲೆ ಕೆಲಸಕ್ಕೆ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು

 

 ಈ ಕಾರ್ಯಕ್ರಮದಲ್ಲಿ ಎಸ್ ಬಿ.ಐ ಬ್ಯಾಂಕಿನ ವ್ಯವಸ್ಥಾಪಕ ಹಾಗೂ  ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಹೆಚ್.ವಿ. ಅನಂತ ಸುಬ್ಬರಾವ್, ಬಿ. ಜಯದೇವರಾಜೇ ಅರಸು, ಜಿ.ಎಸ್. ಮಹದೇವಯ್ಯ, ಹೆಚ್.ಡಿ. ರೇವಪ್ಪ, ಎಸ್. ನಾಗರಾಜ, ವೆಂಕಟರಮಣಪ್ಪ ಮತ್ತು ಇತರರು ಹಾಗೂ ನಿಗಮದ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದರು.

Facebook
Twitter
LinkedIn
WhatsApp
Email
Tumblr
Telegram
Mix

Leave a Comment

Your email address will not be published. Required fields are marked *

Translate »
Scroll to Top