ಮತ್ತೆ ತವರು ಸೇರಿದ ಗಂಗಾವತಿ ಶಾಸಕ ಜನಾರ್ದನರೆಡ್ಡಿ

ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

 

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಡ್ಡಿ ಅವರು ಈ ಮೂಲಕ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದರು. ಶ್ರೀಮತಿ ಅರುಣಲಕ್ಷ್ಮಿ, ಮಾಜಿ ಸಚಿವ ಟಿ.ಜಾನ್ ಅವರ ಪುತ್ರ ಡಾ.ಥಾಮಸ್ ಜಾನ್ ಅವರೂ ಬಿಜೆಪಿ ಸೇರಿದರು.

ಗಾಲಿ ಜನಾರ್ದನ ರೆಡ್ಡಿ ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದಾರೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಯಾಗಿ ಮಾಡುವ ದೃಷ್ಟಿಯಿಂದ ಅವರು ಬಿಜೆಪಿ ಸೇರಿದ್ದಾರೆ ಎಂದು ನುಡಿದರು.

 

ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ. ಮುಂದಿನ ಲೋಕಸಭಾ ಚುನಾವಣೆಯು ದೇಶದ ಭವಿಷ್ಯ ರೂಪಿಸಲಿದೆ ಎಂದು ಅವರು ನುಡಿದರು. ಪಕ್ಷದ ಹಿತದೃಷ್ಟಿ, ಏಳಿಗೆಗಾಗಿ ಎಲ್ಲರನ್ನೂ ತೊಡಗಿಸಿಕೊಳ್ಳಲಿದ್ದೇವೆ ಎಂದು ಅವರು ತಿಳಿಸಿದರು.

ಗಾಲಿ ಜನಾರ್ದನ ರೆಡ್ಡಿ ಅವರು ಮಾತನಾಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ವಿಲೀನ ಮಾಡಿದ್ದೇವೆ. ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು, ಬೆಂಬಲಿಗರು ಯಡಿಯೂರಪ್ಪ ಅವರ ಆಶೀರ್ವಾದ, ವಿಜಯೇಂದ್ರರ ನೇತೃತ್ವದಲ್ಲಿ ಬಿಜೆಪಿ ಸೇರಿದ್ದೇವೆ ಎಂದು ತಿಳಿಸಿದರು.

 

ದೇಶದ ಸಮಗ್ರತೆ, ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಾಗಿ ಭಾರತವನ್ನು ತರುವ ನಿಟ್ಟಿನಲ್ಲಿ ಕೆಲಸ ಮಾಡಿದ ನರೇಂದ್ರ ಮೋದಿಜೀ ಅವರ ಕೈಯನ್ನು ಬಲಪಡಿಸಲು ಬಿಜೆಪಿ ಸೇರಿದ್ದೇನೆ. ಅಮಿತ್ ಶಾ ಜೀ ಅವರು ನನ್ನನ್ನು ದೆಹಲಿಗೆ ಆಹ್ವಾನಿಸಿದ್ದರು ಹಾಗೂ ಬಿಜೆಪಿಗೆ ಸೇರಲು ತಿಳಿಸಿದ್ದಾರೆ. ಅದರಂತೆ ಬಿಜೆಪಿ ಸೇರಿದ್ದೇನೆ ಎಂದು ತಿಳಿಸಿದರು.

ಯಡಿಯೂರಪ್ಪ ಅವರು ನನಗೆ ಸಚಿವನಾಗಲು ಅತಿ ಚಿಕ್ಕ ವಯಸ್ಸಿನಲ್ಲೇ ಅವಕಾಶ ಕೊಟ್ಟಿದ್ದರು. ಬಿಜೆಪಿ ಕಟ್ಟುವ ಅನುಭವ ನನಗಾಯಿತು. ಯಡಿಯೂರಪ್ಪ ಅವರ ಪುತ್ರರೇ ರಾಜ್ಯಾಧ್ಯಕ್ಷನಾಗಿರುವ ಸಂದರ್ಭದಲ್ಲಿ ಪಕ್ಷ ಸೇರಿ ಮತ್ತೆ ಕೆಲಸ ಮಾಡುವ ಅವಕಾಶ ಸಿಗುತ್ತಿದೆ ಎಂದರು. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುವೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಬಿಜೆಪಿ ಸೇರುತ್ತಿದ್ದೇನೆ ಎಂದು ವಿವರಿಸಿದರು.

 

ಪಕ್ಷ ಕೊಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವೆ. ಮನೆಗೆ ಮತ್ತೆ ಬಂದಂತೆ ಭಾಸವಾಗುತ್ತಿದೆ. ನನ್ನ ರಕ್ತದ ಕಣಕಣದಲ್ಲೂ ಬಿಜೆಪಿ ಇತ್ತು. ಪಕ್ಷವೆಂಬ ತಾಯಿಯ ಮಡಿಲಿಗೆ ಕ್ಷೇಮವಾಗಿ ಸೇರಿದ್ದೇನೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದರಾದ ಪಿ.ಸಿ.ಮೋಹನ್, ದೇವೇಂದ್ರಪ್ಪ, ಕರ್ನಾಟಕ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು, ಮುಖ್ಯ ಸಚೇತಕ ಎನ್.ರವಿಕುಮಾರ್, ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್, ಮಾಜಿ ಸಚಿವ ಆನಂದ್ ಸಿಂಗ್ ಮತ್ತಿತರ ಮುಖಂಡರು ಇದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top