ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರಿಸ್ಪಾನ್ಸ್,

ಮೊದಲ ಜನಸ್ಪಂದನದಲ್ಲಿ ಶೇ. 98 ರಷ್ಟು ಅರ್ಜಿ ವಿಲೇವಾರಿ,

ಅಸಮಾನತೆ ನಿವಾರಿಸಿ ಸಮಸಮಾಜ ನಿರ್ಮಿಸುವ ಉದ್ದೇಶದಿಂದ ಗ್ಯಾರಂಟಿಗಳು ಜಾರಿ;ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ನ.27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ 5 ಸಾವಿರ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

 

ವಿಧಾನಸೌಧದ ಆವರಣದಲ್ಲಿ ಬುಧವಾರ ನಡೆದ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಡಳಿತ ಜನರ ಬಳಿಗೆ ಹೋಗಬೇಕು;ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಜನರು ಸಣ್ಣ ಪುಟ್ಟ ಕೆಲಸಗಳಿಗಾಗಿ ಬೆಂಗಳೂರಿಗೆ‌ ಬರುವಂತಾಗಬಾರದು;ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಯಬೇಕು. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ಅವರು  ವಿವರಿಸಿದರು.

 

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು ಎಂದು ತಿಳಿಸಿದರು.

ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು; ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದ ಅವರು ಪ್ರತಿಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಜಾರಿಗೊಳಿಸಿದರೇ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂಬುದು ಸೇರಿದಂತೆ ವಿವಿಧ ರೀತಿಯ ಅಪಪ್ರಚಾರಗಳನ್ನು ಮಾಡಿದ್ದು,ಅಂತ  ಅಪಪ್ರಚಾರಗಳಿಗೆ ಮತ್ತು ಸುಳ್ಳು ವದಂತಿಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ; ಅಸಮಾನತೆ ನಿವಾರಿಸುವ ಕಾರ್ಯಕ್ರಮ. ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು. ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ. ಸಮ ಸಮಾಜ ನಿರ್ಮಿಸುವ ಮತ್ತು ಅಸಮಾನತೆ ಹೊಗಲಾಡಿಸುವ ಈ ಗ್ಯಾರಂಟಿ ಸ್ಕೀಂಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಅವರು ಹೇಳಿದರು.

ನಾವು ಸಂವಿಧಾನ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರವವರು.

ಭ್ರಾತೃವ ಬೆಳೆಯಬೇಕು, ಸಮಾನತೆ ಬೆಳೆಯಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ಪ್ರತಿಪಾದಿಸಿದರು.

ಮಾಧ್ಯಮದವರು ಸಹ ಗ್ಯಾರಂಟಿ ಕಾರ್ಯಕ್ರಮಗಳ ಮೌಲ್ಯಮಾಪನ ಮಾಡಿ ಎಂದು ಹೇಳಿದ ಅವರು ಗ್ಯಾರಂಟಿಗಳು ಸಹ ಅಭಿವೃದ್ಧಿ ಕಾರ್ಯಕ್ರಮಗಳೇ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ, ಶಿವರಾಜ ತಂಗಡಗಿ, ಶಾಸಕರುಗಳು, ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

 

ನಂತರ ಮುಖ್ಯಮಂತ್ರಿಗಳು ಕೌಂಟರ್ ಗಳಿಗೆ ತೆರಳಿ ಅರ್ಜಿದಾರರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಹಿಂದಿನ ರಾತ್ರಿಯೇ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ದೂರದೂರುಗಳಿಂದ ಜನ ಆಗಮಿಸಿದ್ದು, ಬೆಳಿಗ್ಗೆ 8.30 ಗಂಟೆಗೇ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ, ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಯಿತು. ಕಂದಾಯ ಇಲಾಖೆಯ ಕೌಂಟರಿನಲ್ಲಿ ನಿರೀಕ್ಷೆಗೂ ಮೀರಿ ಜನರು ಸೇರಿದ್ದನ್ನು ಕಂಡು, ಕೂಡಲೇ ಆಯೋಜಕರು ಇನ್ನೊಂದು ಕೌಂಟರ್‌ ತೆರೆದು ಜನರಿಗೆ ಆಸನ ವ್ಯವಸ್ಥೆ ಮಾಡಿದರು

 

ಪೊಲೀಸ್‌ ಬಂದೋಬಸ್ತ್:

 

ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್‌ ಅವರ ನೇತೃತ್ವದಲ್ಲಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಒಟ್ಟು 936 ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 8 ಎಸಿಪಿ, 23 ಇನ್ಸ್‌ಪೆಕ್ಟರ್‌, 58 ಸಬ್‌ ಇನ್ಸ್‌ಪೆಕ್ಟರ್‌, 205 ಪೊಲೀಸ್‌ ಕಾನ್ಸ್‌ಟೇಬಲ್‌, 142 ಮಹಿಳಾ ಪೊಲೀಸ್‌ ಸಿಬ್ಬಂದಿ, 500 ಹೋಂ ಗಾರ್ಡ್‌ಗಳನ್ನು ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲಾಗಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top