ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಚುನಾವಣೆ ಮುಗಿದ ಬಳಿಕ ಬಿಜೆಪಿ ನಾಯಕರಿಗೆ ದಾಖಲೆ ಸಮೇತ ಉತ್ತರ ನೀಡುತ್ತೇನೆ ಎಂದಿದ್ದಾರೆ,
ಸದಾಶಿವ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಬಂಡವಾಳ ಹೂಡಿಕೆ ವಿಚಾರವಾಗಿ ರಾಜ್ಯದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು,
ಬಂಡವಾಳ ಹೂಡಿಕೆದಾರರು ನೆರೆ ರಾಜ್ಯಗಳಲ್ಲಿ ಬಂಡವಾಳ ಹೂಡುತ್ತಿರುವ ವಿಚಾರವಾಗಿ ಬಿಜೆಪಿ ನಾಯಕರು ಮಾಡಿದ್ದ ಟ್ವೀಟ್ಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಬಿಜೆಪಿಯ ದುರಾಡಳಿತ, ಕಿರುಕುಳಕ್ಕೆ ಬೇಸತ್ತು ಹಲವು ಉದ್ದಿಮೆದಾರರು, ವ್ಯಾಪಾರಿಗಳು ದೇಶ ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಆಸಕ್ತಿ ತೋರಿದ್ದಾರೆ. ಬಿಜೆಪಿ ನಾಯಕರು ದಾಖಲೆಗಳನ್ನು ಪರಿಶೀಲಿಸಿ ಮಾನಾಡಬೇಕು ಎಂದರು.
ನಮ್ಮ ಕೈಗಾರಿಕಾ ಸಚಿವರು ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಉತ್ತಮವಾಗಿದೆ. ಚುನಾವಣೆ ಮುಗಿಯಲಿ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ಕೊಡುತ್ತೇವೆ ಎಂದರು. ಕರ್ನಾಟಕ ಶಾಂತಿಯ ನಾಡು, ಪ್ರಗತಿ ಮತ್ತು ಅಭಿವೃದ್ಧಿಯ ರಾಜ್ಯ ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಕರ್ನಾಟಕ ಹಾಗೂ ಬೆಂಗಳೂರನ್ನು ಇಡೀ ವಿಶ್ವವೇ ಗುರುತಿಸಿದೆ. ಎಲ್ಲ ಹೂಡಿಕೆದಾರರು ರಾಜ್ಯದತ್ತ ಚಿತ್ತ ನೆಟ್ಟಿದ್ದಾರೆ ಎಂದರು.
ಬಿಜೆಪಿ ನಾಯಕರು ಏನಾದರೂ ಟೀಕೆ ಮಾಡಲಿ ನಾವು ಜನರಿಗಾಗಿ ಕೆಲಸ ಮಾಡುತ್ತೇವೆ. ಜನರೂ ನಮ್ಮ ಪರವಾಗಿ ಇದ್ದಾರೆ ಎಂದರು.
ಕುಟುಂಬದ ವಿಚಾರ
ವಿದೇಶದಲ್ಲಿರುವ ಸಂಸದ ಪ್ರಜ್ವಲ್ರೇವಣ್ಣ ಅವರಿಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಬಹಿರಂಗವಾಗಿ ಪತ್ರ ಬರೆದು ದೇಶಕ್ಕೆ ಮರಳಿ ವಿಚಾರಣೆ ಎದುರಿಸುವಂತೆ ತಾಕೀತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿ.ಕೆ ಶಿವಕುಮಾರ್, ಇದು ಅವರ ಕುಟುಂಬದ ವಿಚಾರ, ಈ ಬಗ್ಗೆ ನಾನು ಮಾತನಾಡಲ್ಲ ಎಂದರು.