ದೇಶದ ಸಮಗ್ರ ಅಭಿವೃದ್ಧಿಗೆ ಎನ್ಇಪಿ ಅವಶ್ಯಕ: ಸಚಿವ ಅಶ್ವಥ್ ನಾರಾಯಣ

ಬೆಳಗಾವಿ: ರಾಷ್ಟೀಯ ಶಿಕ್ಷಣ ನೀತಿಯಿಂದ ಭಾರತ ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವಾಗಲಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜದ ಪರಿವರ್ತನೆಗೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಎನ್ಇಪಿ ಅವಶ್ಯಕ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ತಿಳಿಸಿದರು.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶನಿವಾರ (ಏ.30) ನಡೆದ “ರಾಷ್ಟೀಯ ಶಿಕ್ಷಣ ನೀತಿ- 2020 ಅನುಷ್ಠಾನದ ರಾಷ್ಟ್ರೀಯ ಸಮ್ಮೇಳನ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ವಿಶ್ವದ ಅನೇಕ ದೇಶಗಳು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಳವಣಿಗೆ ಹೊಂದಿವೆ ಇದಕ್ಕೆ ಅನುಗುಣವಾಗಿ ಬಲಿಷ್ಠ ಭಾರತ ನಿರ್ಮಾಣಕ್ಕೆ ರಾಷ್ಟೀಯ ಶಿಕ್ಷಣ ನೀತಿ ಅವಷ್ಯವಿದ್ದು, ದೇಶದಲ್ಲಿ 34 ವರ್ಷಗಳ ನಂತರ ಈ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆಗೆ ವೃತ್ತಿಪರ ಬೆಳವಣಿಗೆ ಮೂಲಕ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಅಭಿವೃದ್ದಿ ಹೆಚ್ಚಿಸುವುದು ಈ ಶೈಕ್ಷಣಿಕ ಪದ್ಧತಿಯ ಉದ್ದೇಶವಾಗಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನಂತರ ಸಲೀಸಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುಬಹುದು ಎಂದು ಹೇಳಿದರು.

ಮಾನವ ಸಂಪನ್ಮೂಲ ಶಕ್ತಿ ಸದ್ಬಳಕೆ:

ಸ್ವಾಂತಂತ್ರ್ಯ ನಂತರ ನೂತನ ರಾಷ್ಟೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವುದು ಬಹಳ ಸವಾಲಿನ ಕೆಲಸವಾಗಿತ್ತು. ಆದರೆ ಮುಂಬರುವ ದಿನಗಳಲ್ಲಿ ಈ ಶಿಕ್ಷಣ ನೀತಿ ದೇಶದ ಅಭಿೃದ್ಧಿಗೆ ಅನುಕೂಲವಾಗಲಿದೆ. ಭವಿಷ್ಯದಲ್ಲಿ ಸಮಾಜ ಬದಲಾವಣೆಯ ಉತ್ತಮ ಶಿಕ್ಷಣ ನೀತಿ ಇದಾಗಲಿದೆ ಎಂದು ಹೇಳಿದರು.ವಿದ್ಯಾರ್ಥಿಗಳು, ಯುವಕರು ಉದ್ಯೋಗ ಅರಸಿ ಹೋಗದೆ ಕೌಶಲ್ಯಾಭಿವೃದ್ಧಿಯಿಂದ ಸ್ವಯಂ ಉದ್ಯೋಗ ಸೃಷ್ಟಿಸುವ ಕಾರ್ಯಕ್ಕೆ ಮುಂದಾಗಬೇಕು. ದೇಶದಲ್ಲಿನ ಮಾನವ ಸಂಪನ್ಮೂಲನ ಶಕ್ತಿ ಸದ್ಬಳಕೆ ಮಾಡಿಕೊಂಡು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬದಲಾವಣೆ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಎನ್ಇಪಿ ಸಹಾಯ ಆಗಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೆಚ್ಚಿಸಲಿದೆ:

ಹೊಸ ರಾಷ್ಟೀಯ ಶಿಕ್ಷಣ ನೀತಿ ಪರಿಣಾಮಕಾರಿಯಾಗಿದ್ದು, ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಿ, ಕಲೆ, ವಾಣಿಜ್ಯ ಹಾಗೂ ತಂತ್ರಜ್ಞಾನ ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳ ಜ್ಞಾನ ಮಟ್ಟವನ್ನು ಸುಧಾರಿಸಲಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲಿದೆ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದರು. ಈ ವೇಳೆ ಮಾತನಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಭಾರತದಲ್ಲಿ 34 ವರ್ಷಗಳ ನಂತರ, ಉತ್ತಮ ಮಾದರಿಯ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಶೈಕ್ಷಣಿಕ ಬೆಳವಣಿಯಿಂದ ಸಮಾಜದ ಅಭಿವೃದ್ಧಿ ಜೊತೆಗೆ ಬಲಿಷ್ಠ ಮಾನವ ಸಂಪನ್ಮೂಲ ಶಕ್ತಿ ನಿರ್ಮಾಣಕ್ಕೆ ಈ ಶಿಕ್ಷಣ ನೀತಿ ಸದ್ಬಳಕೆಯಾಗಲಿದೆ ಎಂದು ತಿಳಿಸಿದರು. ಹೊಸ ಶಿಕ್ಷಣ ನೀತಿಯಿಂದ ವ್ಯಕ್ತಿಯ ಸಂಪೂರ್ಣ ವ್ಯಕ್ತಿತ್ವ ಬೆಳವಣಿಗೆ ಆಗಲಿದೆ. ಸಮಾಜದ ಅಭಿವೃದ್ಧಿಗೆ ಬೇಕಾಗುವ ಉತ್ತಮ ಗುಣಮಟ್ಟದ ಶಿಕ್ಷಣ ನೀತಿ ಇದಾಗಿದ್ದು, ವಿದ್ಯಾರ್ಥಿಗಳು ಕೇವಲ ಪದವಿ ಪ್ರಮಾಣ ಪತ್ರ ಪಡೆಯುವುದು ಮಾತ್ರವಲ್ಲದೆ ವ್ಯಕ್ತಿತ್ವ ವಿಕಸನ ಹೊಂದಬಹುದು ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಈ ಸಂದರ್ಭದಲ್ಲಿ ಹೊಸ ಶಿಕ್ಷಣ ಪಠ್ಯಗಳ ಅನುಷ್ಠಾನದ ಕುರಿತು ವಾರ್ಷಿಕ ಕ್ರಮಗಳ ಕೈಪಿಡಿ ಹಾಗೂ ಕರ್ನಾಟಕ ಉತ್ತರ ಪ್ರಾಂತ್ಯದ ಸಮಷ್ಟಿ ವಾರ್ಷಿಕ ಪುಸ್ತಕ ಬಿಡುಗಡೆ ಮಾಡಲಾಯಿತು. ಡಾ. ಮನಮೋಹನ ವೈದ್ಯ, ಭಾರತೀಯ ಶಿಕ್ಷಣ ಮಂಡಲದ ರಾಷ್ಟೀಯ ಅಧ್ಯಕ್ಷರಾದ ಪ್ರೊ. ಸಚ್ಚಿದಾನಂದ ಜೋಶಿ, ಭಾರತೀಯ ಶಿಕ್ಷಣ ಮಂಡಲದ ರಾಷ್ಟೀಯ ಸಹ ಸಂಘಟನಾ ಕಾರ್ಯದರ್ಶಿ ಶಂಕರಾನಂದ, ಉತ್ತರ ಕರ್ನಾಟಕ ಭಾಗದ ಭಾರತೀಯ ಶಿಕ್ಷಣ ಮಂಡಲದ ಅಧ್ಯಕ್ಷರಾದ ಡಾ. ಸತೀಶ ಜಿಗಜಿನ್ನಿ, ವಿಟಿಯು ಕುಲಪತಿಗಳಾದ ಪ್ರೊ. ಕರಿಸಿದ್ದಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top