LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಡಿಕೆ ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ: ಸತೀಶ್ ಜಾರಕಿಹೊಳಿ ಯೂಟರ್ನ್

ಬೆಂಗಳೂರು:ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದು ಬುಧವಾರ ಬೆಳಗ್ಗೆ ಆಗ್ರಹಿಸಿದ್ದ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್​​ನಿಂದ ಖಡಕ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿದ್ದಾರೆ. ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮ ಫೇಸ್​ಬುಕ್ ಮೂಲಕ ಸ್ಪಷ್ಟೀಕರಣ ನೀಡಿದ ಅವರು, ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಡಿಕೆ ಶಿವಕುಮಾರ್ ಬದಲಾವಣೆಗೆ ಆಗ್ರಹಿಸಿಲ್ಲ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆಗ್ರಹಿಸಲಾಗಿದೆ ಎಂಬ ವರದಿಗಳನ್ನು ತಳ್ಳಿಹಾಕಿರುವ ಸಚಿವ ಸತೀಶ್ ಜಾರಕಿಹೊಳಿ ಯೂಟರ್ನ್​ ತೆಗೆದುಕೊಂಡಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಬದಲಿಸಬೇಕೆಂದು ಒತ್ತಾಯಿಸಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಪಕ್ಷದ ಸಂಘಟನೆ ಸುಧಾರಣೆಗೆ ಸಲಹೆ ನೀಡಿದ್ದೇನಷ್ಟೆ, ಆದರೆ, ಅದನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದಿದ್ದಾರೆ.
ಮಾಧ್ಯಮ ವರದಿಗಳ ಬಗ್ಗೆ ಗಮನಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು, ಡಿಕೆ ಶಿವಕುಮಾರ್ ವಿರುದ್ಧ ಸಾಹುಕಾರ್ ಸಮರ ಎಂದೆಲ್ಲ ವರದಿಗಳಾಗಿವೆ. ಹೀಗಾಗಿ ಆ ಬಗ್ಗೆ ಸ್ಪಷ್ಟೀಕರಣ ಕೊಡಬೇಕಾಗಿ ಬಂದಿದೆ ಎಂದು ಸತೀಶ್ ಜಾರಕಿಹೊಳಿ ಫೇಸ್​ಬುಕ್ ಸಂದೇಶದಲ್ಲಿ ತಿಳಿಸಿದ್ದಾರೆ.

ನಾನು ಹೇಳಿದ್ದರಲ್ಲಿ ಕೆಲವು ಸತ್ಯಾಂಶಗಳಿವೆ. ಕೆಲವು ಇಲ್ಲದ ವಿಚಾರಗಳನ್ನು ವೈಭವೀಕರಿಸಲಾಗಿದೆ. ಡಿಕೆ ಶಿವಕುಮಾರ್ ಬದಲಾವಣೆ ಮಾಡಿ ಎಂದು ನಾನು ಹೇಳಿಲ್ಲ. ಪಕ್ಷದಲ್ಲಿ ಮುಂದಿನ ಸಂಘಟನೆಯ ದೃಷ್ಟಿಯಿಂದ ಕೆಲವೊಂದು ಬದಲಾವಣೆಗಳನ್ನು ಮಾಡಬೇಕೆಂದು ಸಲಹೆ ನೀಡಿದ್ದೇನಷ್ಟೆ. ಹಾಗೆಂದು ಡಿಕೆ ಶಿವಕುಮಾರ್ ಅವರನ್ನು ಬದಲಾವಣೆ ಮಾಡಿ ಎಂದು ಹೇಳಿಲ್ಲ, ಇಂದೂ ಹೇಳುತ್ತಿಲ್ಲ, ಮುಂದೆಯೂ ಹೇಳುವುದಿಲ್ಲ. ಆದರೆ, ಇವತ್ತಿನ ವೇಗದ ಸ್ಥಿತಿಯಲ್ಲಿ ನಾ ಹೇಳಿರುವುದನ್ನು ಜನ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ. ಹೈಕಮಾಂಡ್ ನಿರ್ಧಾರ ಮಾಡಬೇಕು ಎಂದಿರುವುದನ್ನು ಹೈಲೈಟ್ ಮಾಡಬೇಕಿತ್ತು ಎಂದು ಅವರು ಹೇಳಿದರು.

ಹೈಕಮಾಂಡ್ ಮನೊವೊಲಿಸಲು ನಾನು ಮುಂದಿನ ವಾರ ದೆಹಲಿಗೆ ಹೋಗುತ್ತೇನೆ ಎಂದಿರುವುದಾಗಿ ವರದಿಯಾಗಿದೆ. ಆದರೆ ನಾನು ಹೇಳಿದ್ದು ಹಾಗಲ್ಲ. ಕರ್ನಾಟಕ ಭವನದ ಹೊಸ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ, ವೀಕ್ಷಣೆಗೆ ಹೋಗುತ್ತೇನೆ ಎಂದಿದ್ದೆ. ಅದು ತಪ್ಪಾಗಿ ವರದಿಯಾಗಿದೆ. ಇದು ಜನರಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಪಕ್ಷದಲ್ಲಿಯೂ ಸಹಜವಾಗಿಯೇ ಕೆಲವು ಗೊಂದಲಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.
ನಮ್ಮ ಪಕ್ಷದಲ್ಲಿ ಹಿಂದಿನಷ್ಟು ಸಂಘಟನೆ ಈಗಿಲ್ಲ ಎಂದು ನಾನು ಹೇಳಿದ್ದು ನಿಜ. ಯಾಕೆಂದರೆ 2023ರಲ್ಲಿ ನಮ್ಮಲ್ಲಿ ಒಳ್ಳೆಯ ಸಂಘಟನೆ ಇತ್ತು. ಈಗ ಹಾಗೆ ಇಲ್ಲ. ಇದಕ್ಕೆ ಎಲ್ಲರೂ ಕಾರಣ. ನಾನೂ ಸಹ ಕಾರಣ ಎಂದು ಹೇಳಿದ್ದೇನೆಯೇ ವಿನಹ ಯಾರೊಬ್ಬರನ್ನೂ ಗುರಿಯಾಗಿಸಿ ಹೇಳಿಕೆ ನೀಡಿಲ್ಲ. ಆದರೆ, ನಾನು ಹೇಳಿದ್ದು ಒಂದು ವರದಿಯಾಗಿದ್ದು ಮತ್ತೊಂದಾಗಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬುಧವಾರ ಬೆಳಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಆದಷ್ಟು ಬೇಗ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ ಆಗಬೇಕು. ನಮಗೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು. ವೋಟು ತರುವವರನ್ನು ಅಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಪಾಪ್ಯುಲರ್ ಇರುವವರನ್ನು ಅಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ ಎಂದು ತಿಳಿಸಿದ್ದರು. ಈ ವಿಚಾರ ಕಾಂಗ್ರೆಸ್ ಆಂತರಿಕ ಬೇಗುದಿಯ ಬೆಂಕಿಗೆ ತುಪ್ಪ ಸುರಿದಿತ್ತು. ಇದರ ಬೆನ್ನಲ್ಲೇ ಅವರು ಸ್ಪಷ್ಟನೆ ನೀಡಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ