ಹುಳಿಯಾರು: ಹುಳಿಯಾರು ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕಾನೂನು ಬಾಹಿರ ಚಟುವಟಿಕೆಗಳು ಮಿತಿಮೀರುತ್ತಿದ್ದು, ಪೊಲೀಸರ ವೈಫಲ್ಯದ ವಿರುದ್ಧ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂತರಾಜು ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದ್ದು ಮೃತ ವ್ಯಕ್ತಿಗೆ ಅನಾರೋಗ್ಯ ಉಂಟಾದಾಗ ಪೊಲೀಸರು ಆಸ್ಪತ್ರೆಗೆ ದಾಖಲಿಸದೆ ಇರುವುದು ದೊಡ್ಡ ಅಪರಾಧ ಎಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಟೇಷನ್ನಲ್ಲಿ ಕರ್ತವ್ಯದಲ್ಲಿದ್ದ ಜವಾಬ್ದಾರಿಯುತ ಅಧಿಕಾರಿಗಳ ಮೇಲೆ ತಕ್ಷಣವೇ ಪ್ರಕರಣ ದಾಖಲಿಸಬೇಕು. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಹುಳಿಯಾರಿನಲ್ಲಿ ಮಾಡದೆ ತುಮಕೂರಿನಲ್ಲಿ ಇಬ್ಬರು ವೈದ್ಯರ ಸಮ್ಮುಖದಲ್ಲಿ ವಿಡಿಯೋ ಚಿತ್ರೀಕರಣದೊಂದಿಗೆ ನಡೆಸಬೇಕು ಎಂದು ಒತ್ತಾಯಿಸಿದರು.
ಹುಳಿಯಾರು ಹೋಬಳಿಯಲ್ಲಿ ಇಸ್ಪೀಟ್ ದಂಧೆ ಅತಿಯಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣವೇ ಇದನ್ನು ಹತ್ತಿಕ್ಕಲು ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹುಳಿಯಾರು ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಂಜೆ 6 ಗಂಟೆಯ ನಂತರ ಬಸ್ಸಿನಿಂದ ಇಳಿದು ಹೋಗುವ ಮಹಿಳೆಯರ ಸರಗಳ್ಳತನ, ಕುರಿಗಳ್ಳತನ ಮತ್ತು ದರೋಡೆ ಪ್ರಕರಣಗಳು ರಾಜಾರೋಷವಾಗಿ ನಡೆಯುತ್ತಿವೆ. "ಯಾರೂ ಕೇಳುವವರಿಲ್ಲದಂತಾಗಿದೆ" ಎಂದು ಕೆಲ ಪ್ರಕರಣಗಳನ್ನು ವಿವರಿಸಿದರು.
ಒಂದು ವೇಳೆ ಎಸ್ಪಿಯವರು ಈ ಕೂಡಲೇ ಮಧ್ಯಪ್ರವೇಶಿಸಿ ದಂಧೆಕೋರರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಮಾಧುಸ್ವಾಮಿ ಎಚ್ಚರಿಕೆ ನೀಡಿದ್ದಾರೆ.