ಹೂವಿನಹಡಗಲಿ: ಗಣೇಶ ವಿಸರ್ಜನಾ ಮೆರವಣಿಗೆಯ ಮಾರ್ಗಕ್ಕೆ ಸಂಬಂಧಿಸಿದಂತೆ ಪಟ್ಟಣದ ಇಸ್ಲಾಂಪೇಟೆಯಲ್ಲಿ ಶುಕ್ರವಾರ ರಾತ್ರಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಪಟ್ಟಣದ ಕೊರವರ ಓಣಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ಇಸ್ಲಾಂಪೇಟೆ ಮೂಲಕ ಸಾಗುತ್ತಿದ್ದ ಸಂದರ್ಭದಲ್ಲಿ, ಒಂದು ಗುಂಪಿನವರು ಮೆರವಣಿಗೆಗೆ ಅಡ್ಡಿಪಡಿಸಿ, ಕಳೆದ ವರ್ಷ ಬಳಸಿದ್ದ ಮಾರ್ಗದಲ್ಲೇ ಮೆರವಣಿಗೆ ಸಾಗಬೇಕು ಎಂದು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಅವರು ಸಾರ್ವಜನಿಕ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ಇದಕ್ಕೆ ಪ್ರತಿಯಾಗಿ ಮತ್ತೊಂದು ಗುಂಪಿನ ಯುವಕರು, ಹಲವು ವರ್ಷಗಳಿಂದ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿರುವ ಇದೇ ಮಾರ್ಗದಲ್ಲಿ ಮೆರವಣಿಗೆ ಮುಂದುವರಿಯಬೇಕು ಎಂದು ಪಟ್ಟು ಹಿಡಿದರು. ಕಳೆದ ವರ್ಷ ಈದ್ ಮಿಲಾದ್ ಆಚರಣೆಯ ಹಿನ್ನೆಲೆಯಲ್ಲಿ ಮಾರ್ಗ ಬದಲಾಯಿಸಲಾಗಿತ್ತು. ಈ ಬಾರಿ ಹಿಂದಿನ ರೀತಿಯಲ್ಲೇ ಮೆರವಣಿಗೆ ಸಾಗಲಿದೆ ಎಂದು ಅವರು ಹೇಳಿದರು.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಎರಡೂ ಗುಂಪುಗಳ ನಡುವೆ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಳ್ಳದಂತೆ ಕ್ರಮ ಕೈಗೊಂಡರು.
ಸ್ಥಳಕ್ಕೆ ಶಾಸಕ, ಎಸ್ಪಿ ಭೇಟಿ
ವಿಷಯ ತಿಳಿಯುತ್ತಿದ್ದಂತೆ ಶಾಸಕ ಕೃಷ್ಣನಾಯ್ಕ ಸ್ಥಳಕ್ಕೆ ಆಗಮಿಸಿ, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿದ್ದ ಯುವಕರೊಂದಿಗೆ ಮಾತುಕತೆ ನಡೆಸಿದರು.
ಈ ಬಾರಿ ಕಳೆದ ವರ್ಷ ಮೆರವಣಿಗೆ ಸಾಗಿದ್ದ ಮಾರ್ಗದಲ್ಲೇ ವಿಸರ್ಜನಾ ಮೆರವಣಿಗೆ ನಡೆಸಬೇಕು. ಮುಂದಿನ ವರ್ಷಕ್ಕೆ ಎರಡೂ ಕಡೆಯವರೊಂದಿಗೆ ಚರ್ಚಿಸಿ ನಿಗದಿತ ಮಾರ್ಗವನ್ನು ಸ್ಪಷ್ಟವಾಗಿ ಅಂತಿಮಗೊಳಿಸಲಾಗುವುದು ಎಂದು ಶಾಸಕ ಕೃಷ್ಣನಾಯ್ಕ ತಿಳಿಸಿದರು. ಬಳಿಕ ಯುವಕರು ಇದಕ್ಕೆ ಒಪ್ಪಿಗೆ ಸೂಚಿಸಿ ಸ್ಥಳದಿಂದ ತೆರಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಡಿವೈಎಸ್ಪಿಗಳಾದ ಸಂತೋಷ ಚವ್ಹಾಣ, ಮಲ್ಲೇಶ ದೊಡ್ಡಮನಿ, ಸಿಪಿಐ ಮಲ್ಲಪ್ಪ ಹೂಗಾರ ಹಾಗೂ ಪಿಎಸ್ಐ ಮಣಿಕಂಠ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಪೊಲೀಸರ ಸಮಯೋಚಿತ ಮಧ್ಯಪ್ರವೇಶದಿಂದ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳದೆ ನಿಯಂತ್ರಣಕ್ಕೆ ಬಂದಿತು.