ಹುಳಿಯಾರು: ದೇವಸ್ಥಾನದ ಹಿಂಭಾಗ ಇಸ್ಪೀಟ್ ಆಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಯಳನಾಡು ಗ್ರಾಮದ ದೇವಸ್ಥಾನದ ಗುಡಿಗೌಡರಾದ ಕಾಂತರಾಜು (50) ಎಂದು ಗುರುತಿಸಲಾಗಿದೆ. ಮೃತರ ಸಾವಿಗೆ ಪೊಲೀಸರ ದೌರ್ಜನ್ಯವೇ ಕಾರಣ ಎಂದು ಆರೋಪಿಸಿ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಠಾಣೆಯ ಮುಂದೆ ಶವವಿಟ್ಟು ಭಾರಿ ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಘಟನೆಯ ವಿವರ:
ಶುಕ್ರವಾರ ಸಂಜೆ ಸುಮಾರು 5:30 ರ ಸಮಯದಲ್ಲಿ ಯಳನಾಡು ಗ್ರಾಮದ ದೇವಸ್ಥಾನದ ಹಿಂಭಾಗ ಕಾಂತರಾಜು ಸೇರಿದಂತೆ ಸುಮಾರು 10-15 ಜನರು ಇಸ್ಪೀಟ್ ಆಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ದಾಳಿ ನಡೆಸಿದ ಪೊಲೀಸರು ಕಾಂತರಾಜು ಸೇರಿದಂತೆ ಆರು ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ರಾತ್ರಿ 8 ಗಂಟೆಯಾದರೂ ವಶಕ್ಕೆ ಪಡೆದವರನ್ನು ಪೊಲೀಸರು ಬಿಡುಗಡೆ ಮಾಡಿರಲಿಲ್ಲ. ಈ ಬಗ್ಗೆ ವಿಚಾರಿಸಲು ಹೋದ ಗ್ರಾಮಸ್ಥರಿಗೆ ಮತ್ತು ಕುಟುಂಬಸ್ಥರಿಗೆ ಪೊಲೀಸರು ಠಾಣೆಯೊಳಗೆ ಪ್ರವೇಶ ನೀಡದೆ ವಾಪಸ್ ಕಳುಹಿಸಿದ್ದರು ಎಂಬುದು ಗ್ರಾಮಸ್ಥರ ಆಕ್ಷೇಪವಾಗಿದೆ.
ಗ್ರಾಮಸ್ಥರ ಆರೋಪ:
ಠಾಣೆಯಲ್ಲಿ ವಿಚಾರಣೆ ಮುಗಿಸಿ ಹೊರಬರುತ್ತಿದ್ದಂತೆಯೇ ಕಾಂತರಾಜು ಅವರು ಠಾಣೆಯ ಆವರಣದಲ್ಲೇ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಠಾಣೆಯಲ್ಲಿದ್ದ ಇತರ ಪ್ರತ್ಯಕ್ಷದರ್ಶಿಗಳ ಪ್ರಕಾರ, ಪೊಲೀಸರು ಕಾಂತರಾಜು ಅವರಿಗೆ ತೀವ್ರವಾಗಿ ಲಾಠಿ ಪ್ರಹಾರ ನಡೆಸಿದ್ದಾರೆ. ಕಾಂತರಾಜು ಅವರು ತಮಗೆ ಸುಸ್ತಾಗುತ್ತಿದೆ ಎಂದು ಕೇಳಿಕೊಂಡರೂ ಪೊಲೀಸರು ನಿರ್ಲಕ್ಷಿಸಿ, "ನಾಟಕ ಆಡಬೇಡ" ಎಂದು ನಿಂದಿಸಿ ಹಲ್ಲೆ ಮುಂದುವರಿಸಿದ್ದರು ಎಂದು ಜೊತೆಯಲ್ಲಿದ್ದವರು ಆರೋಪಿಸಿದ್ದಾರೆ. ಆ ಸಮಯದಲ್ಲಿ ಠಾಣೆಯಲ್ಲಿ ವಿದ್ಯುತ್ ಸಂಪರ್ಕವೂ ಇರಲಿಲ್ಲ ಎನ್ನಲಾಗಿದೆ.
ಸಿಓಡಿ ತನಿಖೆಗೆ ಒತ್ತಾಯ:
ಕೇವಲ ಇಸ್ಪೀಟ್ ಆಟದ ವಿಚಾರಕ್ಕೆ ಪೊಲೀಸರು ಪ್ರಾಣ ತೆಗೆಯುವ ಮಟ್ಟಿಗೆ ಹಲ್ಲೆ ಮಾಡಿರುವುದು ಅಮಾನವೀಯ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಪೊಲೀಸರ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ತಾಳಲಾರದೆ ಅವರು ಸಾವನ್ನಪ್ಪಿದ್ದಾರೆ ಎಂದು ಠಾಣೆಯ ಬಳಿ ಶವವಿಟ್ಟು ಪ್ರತಿಭಟನೆಗೆ ಮುಂದಾದರು. ಮೃತ ಕುಟುಂಬಕ್ಕೆ ಪರಿಹಾರ ಕೊಡುವಂತೆಯೂ ಠಾಣೆಯಲ್ಲಿ ಕರ್ತವ್ಯ ವಿರ್ವಹಿಸಿದ್ದ ಪೊಲೀಸರನ್ನು ಅಮಾನತ್ತು ಮಾಡುವಂತೆಯೂ, ಪ್ರಕರಣದ ಸಮಗ್ರ ತನಿಖೆಯನ್ನು ಸಿಓಡಿಗೆ ವಹಿಸಬೇಕು ಎಂದು ಪಟ್ಟು ಹಿಡಿದರು. ವಿಚಾರ ತಿಳಿದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಠಾಣೆಗೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಘಟನೆಯ ಕುರಿತು ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು. ಮಧ್ಯರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಅವರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಸದ್ಯ ಕಾಂತರಾಜು ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಒಂದು ವೇಳೆ ಪೊಲೀಸರ ಕಡೆಯಿಂದ ಲೋಪವಾಗಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹುಳಿಯಾರು ಪಟ್ಟಣದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.