ಬಳ್ಳಾರಿ : ಜಾತ್ಯಾತೀತ ಜನತಾದಳ ಪಕ್ಷದ (ಜೆಡಿಎಸ್) ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಹಿರಿಯ ಧುರೀಣ ಮೀನಳ್ಳಿ ತಾಯಣ್ಣ ಅವರು ಮತ್ತೊಂದು ಅವಧಿಗೆ ನೇಮಕಗೊಂಡಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರು, ಇವರನ್ನು ಜೆಡಿಎಸ್ ಜಿಲ್ಲಾಧ್ಯಕ್ಷರನ್ನಾಗಿ ಪುನರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಧುರೀಣ ನಿಖಿಲ್ ಕುಮಾರಸ್ವಾಮಿ ಅವರು ನೂತನ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ ಶುಭ ಹಾರೈಸಿದರು.
ತಾಯಣ್ಣನವರು ಗುರುತರವಾದ ಈ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಮುಖಂಡರನ್ನು ಹಾಗೂ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಪರಿಣಾಮಕಾರಿಯಾಗಿ, ಸದೃಢವಾಗಿ ಸಂಘಟಿಸಿ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶಂಪುರ, ವೆಂಕಟರಾವ್ನಾಡಗೌಡ ಸೇರಿದಂತೆ ಮಾನವಿ ಕ್ಷೇತ್ರದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹಾಗೂ ಅನೇಕ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ತಾಯಣ್ಣನವರಿಗೆ ಶುಭ ಕೋರಿದರು.
3ನೇ ಬಾರಿಗೆ ನನ್ನನ್ನು ಜೆಡಿಎಸ್ ಬಳ್ಳಾರಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ ನಮ್ಮ ನಾಯಕರಾದ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಅತ್ಯಂತ ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವೆ ಎಂದು ನೂತನ ಜಿಲ್ಲಾಧ್ಯಕ್ಷರಾಗಿ ಮರುನೇಮಕ ಗೊಂಡಿರುವ ಮೀನಳ್ಳಿ ತಾಯಣ್ಣ ಅವರು ಪ್ರತಿಕ್ರಿಯಿಸಿದ್ದಾರೆ.