ಬಳ್ಳಾರಿ : ಗಣಿಬಾಧಿತ ಪ್ರದೇಶಗಳ ಪರಿಸರ ಮತ್ತು ಜನರ ಬದುಕಿನ ಪುನಶ್ಚೇತನಕ್ಕಾಗಿ ಕೆಎಂಇಆರ್ಸಿ ನಿಧಿಯನ್ನು ಸಮರ್ಪಕವಾಗಿ ಬಳಸಬೇಕು ಎಂದು ಒತ್ತಾಯಿಸಿ ಹರಗಿನಡೋಣಿ ಗ್ರಾಮದ ನಿವಾಸಿಗಳು ನಗರದಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು.
ಗಣಿಬಾಧಿತ ಪರಿಸರ ಮತ್ತು ಜನ ಬದುಕಿನ ಪುನಶ್ಚೇತನ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಹರಗಿನಡೋಣಿ ಗ್ರಾಮಸ್ಥರೂ ಸೇರಿದಂತೆ, ವಿವಿಧ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡು, ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಹಕ್ಕೊತ್ತಾಯ ಮಂಡಿಸಿದರು.
ಕಳೆದ ಎರಡು ದಶಕಗಳ ಹಿಂದೆ ನಡೆದ ಅಕ್ರಮ ಗಣಿಗಾರಿಕೆಯಿಂದ ಬಳ್ಳಾರಿ ಸೇರಿದಂತೆ ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಪರಿಸರ ಹಾನಿಯಾಗಿದ್ದು, ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಗಣಿಬಾಧಿತ ಪ್ರದೇಶಗಳ ಪುನಶ್ಚೇತನಕ್ಕಾಗಿ ಸರ್ವೋಚ್ಚ ನ್ಯಾಯಾಲಯ ರೂಪಿಸಿದ ಸಮಗ್ರ ಪರಿಸರ ಯೋಜನೆ (ಸಿ.ಇ.ಪಿ.ಎಂ.ಐ.ಝೆಡ್) ಅಡಿಯಲ್ಲಿ ಸ್ಥಾಪಿತವಾದ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ನಿಯಮಿತ (ಕೆಎಂಇಆರ್ಸಿ) ಸಂಸ್ಥೆಯ ಬಳಿ ಸಾವಿರಾರು ಕೋಟಿ ರೂಪಾಯಿ ನಿಧಿ ಇದ್ದರೂ, ಗಣಿಬಾಧಿತ ಗ್ರಾಮಗಳಿಗೆ ಅಗತ್ಯ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಆರೋಪಿಸಿದರು.
ಹರಗಿನಡೋಣಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೆಎಂಇಆರ್ಸಿ ನಿಧಿಯಿಂದ ಕೂಡಲೇ ಕೆರೆ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಜೊತೆಗೆ ವಸತಿ ಇಲ್ಲದವರಿಗೆ ಮನೆಗಳ ನಿರ್ಮಾಣ, ಸರ್ಕಾರಿ ಶಾಲೆಯ ಉನ್ನತೀಕರಣ, ಒಳಚರಂಡಿ ವ್ಯವಸ್ಥೆ, ರಸ್ತೆ ಅಭಿವೃದ್ಧಿ, ಮಹಿಳೆಯರಿಗೆ ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಗಣಿಗಾರಿಕೆಯಿಂದ ಹಾಳಾದ ಪರಿಸರವನ್ನು ಪುನಶ್ಚೇತನಗೊಳಿಸಲು ಅರಣ್ಯಾಭಿವೃದ್ಧಿ ಯೋಜನೆ ಜಾರಿಗೊಳಿಸಿ ಗಣಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಒದಗಿಸಬೇಕು. ಪರಿಸರ ನಿಯಮ ಉಲ್ಲಂಘಿಸುತ್ತಿರುವ ಮೆದು ಕಬ್ಬಿಣ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೂಡಾ ಆಗ್ರಹಿಸಲಾಯಿತು. ಇದೇ ವೇಳೆ ಬೆಳಗಲ್ ಗ್ರಾಮದಲ್ಲಿ ನಿರ್ಮಾಣವಾದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯ ಸಿಬ್ಬಂದಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೂಡಲೇ ಕಾರ್ಯಾರಂಭ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂಬಂಧ ಬಳ್ಳಾರಿ ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಹೋರಾಟ ಸಮಿತಿ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಖಾಲಿ ಕೊಡಗಳನ್ನು ಪ್ರದರ್ಶಿಸಿ, ಹರಗಿನಡೋಣಿಯಲ್ಲಿ ಕೆರೆ ನಿರ್ಮಿಸುವಂತೆ ಒತ್ತಾಯಿಸಿ, ಗಮನ ಸೆಳೆದರು. ಪ್ರತಿಭಟನೆಯಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಎ.ದೇವದಾಸ್ ಸೇರಿದಂತೆ ನ್ಯಾಯವಾದಿ ಸೋಮಶೇಖರಗೌಡ, ಹಾಗೂ ಮುಖಂಡರಾದ ಡಿ.ನಾಗಲಕ್ಷ್ಮಿ, ಆರ್.ಶಿವರಾಮರೆಡ್ಡಿ, ಬಿ.ಹನುಮಂತಪ್ಪ, ಈರಣ್ಣ, ಮತ್ತಿತರೇ ಅನೇಕರು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.