ಶೀಘ್ರ ಬೆಳೆ ಸಮೀಕ್ಷೆ ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬಗರ್ ಹುಕುಂ ಅರ್ಜಿ ವಿಲೇಗೆ 1 ವರ್ಷ ಗಡುವು

ತಕರಾರು-ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ತಾಕೀತು

ಕಂದಾಯ ಗ್ರಾಮಗಳ ಶೀಘ್ರ ಘೋಷಣೆಗೆ ಸೂಚನೆ

ಹೈಕೋರ್ಟ್ ಪ್ರಕರಣಗಳ ಬಗ್ಗೆ ಅಸಡ್ಡೆ ಏಕೆ?

ಚಿತ್ರದುರ್ಗ: ಜಿಲ್ಲೆಯ ಆರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಮುಂದಿನ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ನಡೆಸಿ ಸಂಪೂರ್ಣ ಮಾಹಿತಿಯನ್ನು “ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿದರೆ ಮಾತ್ರ ರೈತರಿಗೆ ಬೆಳೆ ನಷ್ಟ ತುಂಬಿಕೊಡಲು ಸಾಧ್ಯ. ಆ ನಿಟ್ಟಿನಲ್ಲಿ ಅಧಿಕಾರಿಗಳು ಶೀಘ್ರದಲ್ಲಿ ಬೆಳೆ ಸಮೀಕ್ಷೆ ನಡೆಸಿದ ಅಂಕಿಅಂಶಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಚಿತ್ರದುರ್ಗ ಜಿಲ್ಲೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ (ಮೆಮೊರಾಂಡಮ್) ಸಲ್ಲಿಸಿದ್ದು, ಕೇಂದ್ರ ಅಧ್ಯಯನ ತಂಡವೂ ರಾಜ್ಯಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.

 

ಆದರೆ, ತಹಶೀಲ್ದಾರ್, ಗ್ರಾಮ ಲೆಕ್ಕಿಗರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ರೈತನ ಬೆಳೆ ಸಮೀಕ್ಷೆ ನಡೆಸಿ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಬೇಕು. ಆಗಮಾತ್ರ ರೈತರಿಗೆ ನ್ಯಾಯಯುತ ಬೆಳೆ ನಷ್ಟ ಪರಿಹಾರ ನೀಡುವುದು ಸಾಧ್ಯ. ಹೀಗಾಗಿ ಅಧಿಕಾರಿಗಳು ತ್ವರಿತಗತಿಯಲ್ಲಿ ಬೆಳೆ ಸಮೀಕ್ಷೆ ನಡೆಸಬೇಕು ಎಂದು ತಿಳಿಸಿದರು.

ಅಲ್ಲದೆ, “ಬೆಳೆ ನಷ್ಟಕ್ಕೆ ರೈತರಿಗೆ 5 ಎಕರೆ ವರೆಗೆ ಪರಿಹಾರ ಸಿಗಲಿದೆ. ಒಮ್ಮೆ ಬೆಳೆ ಸಮೀಕ್ಷೆ ಮುಗಿಸಿದ ನಂತರ ಬಿಟ್ಟುಹೋದ ರೈತರ ಹೆಸರನ್ನು ಮತ್ತೆ ಪರಿಹಾರದ ಪಟ್ಟಿಗೆ ಸೇರಿಸುವುದು ಅಸಾಧ್ಯ. ಅಲ್ಲದೆ, ನಗದಿನ ಮೂಲಕವೂ ಪರಿಹಾರ ನೀಡಿಕೆಗೆ ಅವಕಾಶ ಇಲ್ಲ. ಪರಿಹಾರದ ಹಣ ಬ್ಯಾಂಕ್ ಖಾತೆಗೆ ಸಂದಾಯವಾಗಲಿ. ಹೀಗಾಗಿ ಅಧಿಕಾರಿಗಳು ಈಗಲೇ ಬೆಳೆ ಸಮೀಕ್ಷೆಯನ್ನು ಶೇ.100 ರಷ್ಟು ದಕ್ಷತೆಯಿಂದ ಮುಗಿಸಬೇಕು. ಬೆಳೆ ಸಮೀಕ್ಷೆಯಿಂದ ಮಾತ್ರ ರೈತರಿಗೆ ಪರಿಹಾರ ನೀಡಲು ಸಾಧ್ಯ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಾಕೀಕು ಮಾಡಿದರು.

ಬಗರ್ ಹುಕುಂ ಅರ್ಜಿ ವಿಲೇಗೆ 1 ವರ್ಷ ಗಡುವು

 

ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಸಾಗುವಳಿ ಚೀಟಿ ನೀಡುವಂತೆ ಚಿತ್ರದುರ್ಗದಲ್ಲಿ ಸುಮಾರು 41,580 ಅರ್ಜಿಗಳು ಸಲ್ಲಿಕೆಯಾಗಿದೆ. ಈ ಅರ್ಜಿಗಳನ್ನು ಮುಂದಿನ ಒಂದು ವರ್ಷದಲ್ಲಿ ವಿಲೇವಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.

ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳು ವಿಲೇವಾರಿಯಾಗದ ಕಾರಣ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ. ಎಷ್ಟೋ ಜನಕ್ಕೆ ಸರ್ಕಾರಿ ಕಚೇರಿಗೆ ಅಲೆಯುವುದೇ ಕೆಲಸವಾಗಿದೆ. ಜನರನ್ನು ಹೀಗೆ ಅಲೆಸುವುದು ಸರಿಯಲ್ಲ.

ಜನ ಭರವಸೆ ಇಟ್ಟು ಬದಲಾವಣೆ ನಿರೀಕ್ಷೆಯಿಂದ ಹೊಸ ಸರ್ಕಾರ ತಂದಿದ್ದಾರೆ. ಸುಧಾರಣೆ ಕಾರ್ಯರೂಪಕ್ಕೆ ಬರದಿದ್ದರೆ ಪ್ರಜಾಪ್ರಭುತ್ವದ ಆಶಯವೇ ವ್ಯರ್ಥ. ಹೀಗಾಗಿ ಸರ್ಕಾರವೂ ಬಡ ಜನರ ಪರ ಕೆಲಸ ಮಾಡಲು ಬದ್ಧವಾಗಿದೆ. ಆದರೆ, ಸರ್ಕಾರದ ದ್ಯೇಯೋದ್ದೇಶ ಈಡೇರಲು ಅಧಿಕಾರಿಗಳ ಸಹಕಾರ ಮುಖ್ಯ. ಹೀಗಾಗಿ ಮುಂದಿನ ಒಂದು ವರ್ಷದಲ್ಲಿ ಬಗರ್ ಹುಕುಂ ಅರ್ಜಿಗಳನ್ನು ವಿಲೇಗೊಳಿಸಿ. ಅರ್ಹರಿಗೆ ಸಾಗುವಳಿ ಚೀಟಿ ನೀಡಿ ಎಂದು ತಿಳಿಸಿದರು.

 

          ಮುಂದುವರೆದು, “ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ಅಲ್ಲದೆ, ಅಧಿಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ “ಬಗರ್ ಹುಕುಂ ಆ್ಯಪ್‌ ಅಭಿವೃದ್ಧಿಪಡಿಸುತ್ತಿದ್ದು ಇದರ ಸಹಾಯದಿಂದ ಸ್ಯಾಟಲೈಟ್ ಇಮೇಜ್ ಪಡೆದು ನೈಜ ಸಾಗುವಳಿದಾರರನ್ನು ಗುರುತಿಸಬಹುದು. ಅಲ್ಲದೆ, ಇ-ಸಾಗುವಳಿ ಚೀಟಿಯನ್ನೂ ನೀಡಬಹುದು ಎಂದು ಮಾಹಿತಿ ನೀಡಿದರು.

ಕಂದಾಯ ಗ್ರಾಮ ಘೋಷಿಸಿ, ಬಡವರಿಗೆ ನ್ಯಾಯ ಸಲ್ಲಿಸಿ:

ಕಂದಾಯ ಇಲಾಖೆಗೆ ಸೇರದ ಕಾರಣ ಕಂದಾಯೇತರ ಜನವಸತಿ ನಿವಾಸಿಗಳು ಅಭಿವೃದ್ಧಿ ಯೋಜನೆಗಳಿಂದ ವಂಚಿತರಾಗುತ್ತಿದ್ದರು ಹೀಗಾಗಿ ಕರ್ನಾಟಕ ಭೂ ಕಂದಾಯ ಕಾಯಿದೆಗೆ ತಿದ್ದುಪಡಿ ತಂದು ತಾಂಡ-ಗೊಲ್ಲರಹಟ್ಟಿ ಸೇರಿದಂತೆ ಪ್ರದೇಶಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಲು ಅನುವುಮಾಡಿಕೊಡಲಾಗಿತ್ತು.

 

          ಚಿತ್ರದುರ್ಗದಲ್ಲೂ 263 ಕಂದಾಯೇತರ ಜನವಸತಿ ಪ್ರದೇಶಗಳ ಪೈಕಿ151 ಪ್ರದೇಶಗಳನ್ನು ಕಂದಾಯ ಗ್ರಾಮಗಳು ಎಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಆದರೆ ಉಳಿದ ಗ್ರಾಮಗಳಿಗೆ ಏಕೆ ಅಧಿಸೂಚನೆ ಹೊರಡಿಸಿಲ್ಲ? ಹಲವು ಕಡೆಗಳಲ್ಲಿ ಕಂದಾಯ ಗ್ರಾಮವೇ ಘೋಷಿಸದೆ ಹೇಗೆ ಹಕ್ಕು ಪತ್ರ ನೀಡಿದಿರಿ? ಎಂದು ಪ್ರಶ್ನೆ ಮಾಡಿದ ಸಚಿವರು, ಶೀಘ್ರದಲ್ಲೇ ಅರ್ಹ ಕಂದಾಯೇತರ ಜನವಸತಿ ಪ್ರದೇಶಗಳನ್ನು ಗುರುತಿಸಿ ಕಂದಾಯ ಗ್ರಾಮ ಎಂದು ಅಧಿಸೂಚನೆ ಹೊರಡಿಸಿ. ಬಡವರಿಗೆ ಆದಷ್ಟು ಶೀಘ್ರದಲ್ಲಿ ಹಕ್ಕುಪತ್ರ ವಿತರಿಸಿ ಎಂದು ಸೂಚಿಸಿದರು. 

ಪಿಟಿಸಿಎಲ್ ಕಾಯ್ದೆ ಎಚ್ಚರಿಕೆ ಇರಲಿ

          ಬಹುನಿರೀಕ್ಷಿತ ಪಿಟಿಸಿಎಲ್ ಕಾಯ್ದೆಗೆ ಸಂಬಂಧಿಸಿದಂತೆ ಸರ್ಕಾರ ತಿದ್ದುಪಡಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆದಿದೆ. ಹೀಗಾಗಿ ಪಿಟಿಸಿಎಲ್ ಕಾಯ್ದೆಯ ಅಡಿಯಲ್ಲಿ ಮಂಜೂರಾದ ಭೂಮಿಯನ್ನು  ಸರ್ಕಾರದ ಅನುಮತಿ ಇಲ್ಲದೆ ಮಾರಾಟ ಮಾಡುವಂತಿಲ್ಲ.

ಇದರ ಬಗ್ಗೆ ಮಾಹಿತಿ ಇಲ್ಲದ ಕೆಲವು ಅಮಾಯಕರು ಭೂ ಮಾರಾಟಕ್ಕೆ ಮುಂದಾಗಬಹುದು. ಅಥವಾ ಪಿಟಿಸಿಎಲ್ ಭೂಮಿಯನ್ನು ಖರೀದಿ ಮಾಡುವವರೂ ಸಹ ಮೋಸಕ್ಕೊಳಗಾಗುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಪ್ರಕರಣದ ಬಗ್ಗೆ ಅಧಿಕಾರಿಗಳು ಎಚ್ಚರಿಕೆವಹಿಸಬೇಕು ಎಂದು ಸಚಿವರು ತಾಕೀತು ಮಾಡಿದರು. 

ಹೈಕೋರ್ಟ್ ಕೇಸ್ಗಳ ಬಗ್ಗೆ ಅಸಡ್ಡೆ ಏಕೆ?

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ 20,000 ಪ್ರಕರಣಗಳಿವೆ. ಆದರೆ, ಈ ಪೈಕಿ  15,000 ಪ್ರಕರಣಗಳಲ್ಲಿ ತೆಗೆದುಕೊಂಡಿರು ಕ್ರಮ ಶೂನ್ಯ. ಅಲ್ಲದೆ, ನ್ಯಾಯಾಲಯದಲ್ಲಿ ವಕಾಲತ್ತನ್ನೂ ಸಹ ಸಲ್ಲಿಸುವ ಕೆಲಸವನ್ನು ನಮ್ಮ ಅಧಿಕಾರಿಗಳು ಮಾಡಿಲ್ಲ. ಹೀಗಾಗಿ ನ್ಯಾಯಾಲಯ ಇಲಾಖೆಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ಹೊರಹಾಕಿದರು.

 

ಈ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, “ಚಿತ್ರದುರ್ಗದಲ್ಲೂ ಸಹ ಹೈಕೋರ್ಟ್ ನಲ್ಲಿರುವ 359 ಪ್ರಕರಣಗಳ ಪೈಕಿ  302 ಪ್ರಕರಣಗಳಲ್ಲಿ ತಹಶೀಲ್ದಾರರು ಹಾಗೂ ಉಪವಿಭಾಗಾಧಿಕಾರಿ ತೆಗೆದುಕೊಂಡಿರುವ ಕ್ರಮ ಶೂನ್ಯವಾಗಿರುವುದು ಏಕೆ? ಈ ಪ್ರಕರಣಗಳಲ್ಲಿ ಏಕಿನ್ನು ವಕಾಲತ್ತನ್ನೂ ಸಲ್ಲಿಸಿಲ್ಲ? ಎಂದು ಪ್ರಶ್ನಿಸಿದರು. 

ನೀವು ಮಾಡುವ ಕೆಲಸಕ್ಕೆ ಸರ್ಕಾರದ ಜಮೀನು ಖಾಸಗಿಯವರ ಪಾಲಾಗಲು ನಾವು ಸಹಿ ಹಾಕಬೇಕ? ಎಂದು ಕಿಡಿಕಾರಿದ ಸಚಿವರು, ಈ ಸಮಸ್ಯೆಯನ್ನು ಶೀಘ್ರ ಪಡಿಹರಿಸಿ ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿದರು.

ತಕರಾರು ಅರ್ಜಿ ತ್ವರಿತ ವಿಲೇಗೆ ಸೂಚನೆ

ಚಿತ್ರದುರ್ಗ ಜಿಲ್ಲೆಯಾದ್ಯಂತ ತಹಶೀಲ್ದಾರ್ ಹಾಗೂ ಎಸಿ-ಡಿಸಿ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ತಕರಾರು ಪ್ರಕರಣಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಅರ್ಜಿಗಳನ್ನು ಅಧಿಕಾರಿಗಳು ತ್ವರಿತವಾಗಿ ವಿಲೇವಾರಿ ಮಾಡಿರುವುದು ನಿಜ್ಕಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ಸೂಚಿಸಿದರು.

 

ಆದರೆ, ಉಪವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿ 1497 ಪ್ರಕರಣಗಳು ಬಾಕಿ ಇರುವುದು ಏಕೆ? ಎಂದು ಕಿಡಿಕಾರಿದರು. ಅಲ್ಲದೆ, ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರಿಗೆ ನೋಟೀಸ್ ನೀಡಿ ತ್ವರಿತ ವಿಚಾರಣೆ ನಡೆಸಿ ಆದಷ್ಟು ಶೀಘ್ರದಲ್ಲಿ ಈ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಅವರು ತಿಳಿಸಿದರು. 

ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ಆಡಳಿತಕ್ಕೆ ಚುರುಕು:

          ಚಿತ್ರದುರ್ಗ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸಚಿವ ಕೃಷ್ಣ ಬೈರೇಗೌಡ ಅವರು ಕಂದಾಯ ಇಲಾಖೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಆಡಳಿತಕ್ಕೆ ಚುರುಕು ನೀಡಿದರು.

ಮಾಡದಕೆರೆ ನಾಡಕಚೇರಿಗೆ ಭೇಟಿ ನೀಡಿದ ಸಚಿವರು ಅಧಿಕಾರಿಗಳಿಂದ ಹಲವು ಮಾಹಿತಿಗಳನ್ನು ಪಡೆದರು. ಅಲ್ಲದೆ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ನಂತರ ಹೊಸದುರ್ಗ ತಾಲೂಕು ಕಚೇರಿಗೆ ತೆರಳಿದ ಅವರು, ರೆಕಾರ್ಡ್ ರೂಂ ಪರಿಶೀಲನೆ ವೇಳೆ 100 ವರ್ಷದ ಹಳೆಯ ಕಡತಗಳು ದೂಳು ಹಿಡಿದಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಶೀಘ್ರದಲ್ಲೇ ಎಲ್ಲಾ ಕಡತಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಈ ದಾಖಲೆಗಳು ಲಭ್ಯವಾಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಸಚಿವರು ಹೊಸದುರ್ಗದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧ ಕಟ್ಟಡಕ್ಕೂ ಭೇಟಿ ನೀಡಿ ಪರಿಶೀಲಿಸಿದರು.

          ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್, ಚಿತ್ರದುರ್ಗ ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿ, ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ, ಹೊಳಲ್ಕೆರೆ ಶಾಸಕರಾದ ಎಂ. ಚಂದ್ರಪ್ಪ ಹಾಗೂ ಹೊಸದುರ್ಗ ಶಾಸಕರಾದ ಗೋವಿಂದಪ್ಪ, ವಿಧಾನ ಪರಿಷತ್ ಸದಸ್ಯರಾದ ಪಿ. ನವೀನ್ ಕಂದಾಯ ಇಲಾಖೆ ಆಯುಕ್ತರಾದ ಸುನೀಲ್ ಕುಮಾರ್, ಸರ್ವೆ ಇಲಾಖೆ ಆಯುಕ್ತರಾದ ಮಂಜುನಾಥ್ ಹಾಗೂ ಜಿಲ್ಲಾಧಿಕಾರಿಗಳಾದ ದಿವ್ಯಾ ಪ್ರಭು ಅವರು ಉಪಸ್ಥಿತರಿದ್ದರು.

ಇ ಆಫೀಸ್ ಬಳಸಿ: ತಾಕೀತು!

ಸಭೆಯ ವೇಳೆ ಈ ಆಫೀಸ್ ಬಳಕೆಯ ಬಗ್ಗೆಯೂ ಚರ್ಚೆ ನಡೆಸಿದ ಸಚಿವರು, “ಪ್ರಗತಿ ಪರಿಶೀಲನಾ ಪುಸ್ತಕದಲ್ಲಿ ಎಲ್ಲಾ ತಾಲೂಕುಗಳಲ್ಲೂ ಇ-ಆಫೀಸ್ ಜಾರಿಯಾಗಿದೆ ಎಂದು ನಮೂದಿಸಲಾಗಿದೆ. ಆದರೆ, ವಾಸ್ತವದಲ್ಲಿ ಯಾವ ತಾಲೂಕಿನಲ್ಲೂ ಅಧಿಕಾರಿಗಳು ಇ-ಆಫೀಸ್ ಬಳಸುತ್ತಿಲ್ಲ ಎಂಬುದು ಖುದ್ದು ಪರಿಶೀಲನೆಯಿಂದ ತಿಳಿಯುತ್ತದೆ.

ಟಪಾಲು ವಿಭಾಗದಲ್ಲೇ ಇ-ಆಫೀಸ್ ಬಳಸಿದರೆ ಯಾವ ಕಡತವೂ ಕಳುವಾಗಲ್ಲ. ಅಲ್ಲದೆ, ಎಲ್ಲರಿಗೂ ತ್ವರಿತವಾಗಿ ನ್ಯಾಯಸಮ್ಮತ ಪರಿಹಾರವೂ ಲಭ್ಯವಾಗುತ್ತದೆ. ಸರ್ಕಾರ ಪ್ರಚಾರಕ್ಕಾಗಿ ಇ-ಆಫೀಸ್ ಜಾರಿಗೆ ತಂದಿಲ್ಲ. ಬದಲಾಗಿ ಜನರ ಕೆಲಸ ಆಗಲಿ ಎಂಬ ಕಾರಣಕ್ಕೆ ಜಾರಿಗೆ ತರಲಾಗಿದೆ. ಹೀಗಾಗಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಇ-ಆಫೀಸ್ ಬಳಸಬೇಕು. ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು.

 

 

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top