ಡಿ.13 ರಂದು ರಾಷ್ಟ್ರೀಯ ಲೋಕ್ ಅದಾಲತ್

ಬಾಕಿ, ರಾಜಿಯಾಗಬಹುದಾದ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಿ: ನ್ಯಾ.ಕೆ.ಜಿ.ಶಾಂತಿ

Kannada Nadu
ಡಿ.13 ರಂದು ರಾಷ್ಟ್ರೀಯ ಲೋಕ್ ಅದಾಲತ್

ಬಳ್ಳಾರಿ : ರಾಷ್ಟ್ರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ, ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಇದೇ ಡಿ.13 ರಂದು ಈ ವರ್ಷದ ಕೊನೆಯ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಸಾರ್ವಜನಿಕರು ಬಾಕಿ ಇರುವ ಮತ್ತು ರಾಜಿಯಾಗಬಹುದಾದಂತಹ ತಮ್ಮ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು.
ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ವಿಡೀಯೋ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಲೋಕ್ ಅದಾಲತ್ ನ್ಯಾಯಾಂಗದ ಒಂದು ಭಾಗ. ಉಭಯ ಕಕ್ಷಿದಾರರ ಪರಸ್ಪರ ಹೊಂದಾಣಿಕೆಗಾಗಿ ಮತ್ತು ತ್ವರಿತ ನ್ಯಾಯಕ್ಕಾಗಿಯೂ ರಾಷ್ಟ್ರೀಯ ಲೋಕ್ ಅದಾಲತ್ ಸಹಕಾರಿಯಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಅದಾಲತ್ ದಿನದಂದು 15 ಬೆಂಚ್ ಗಳಲ್ಲಿ ಅದಾಲತ್ ನಡೆಯಲಿದ್ದು, ಅಂದು ಬಗೆಹರಿಸಬಹುದಾದ ವಿವಿಧ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಹಾಗೂ ನ್ಯಾಯಾಲಯದ ಶುಲ್ಕವನ್ನು ಮರು ಪಾವತಿಸಲಾಗುತ್ತದೆ ಎಂದು ಹೇಳಿದರು.
ವೈವಾಹಿಕ, ಕೌಟುಂಬಿಕ, ಮೋಟಾರು ಅಪಘಾತ, ಚೆಕ್ ಅಮಾನ್ಯದ, ವಾಣಿಜ್ಯ, ಸೇವಾ ಪ್ರಕರಣಗಳು ಮತ್ತು ರಾಜೀಯಾಗಬಲ್ಲ, ಗ್ರಾಹಕ ವ್ಯಾಜ್ಯ, ಡಿಆರ್ ಟಿ, ಪಾಲುದಾರಿಕೆ, ಸಾರಿಗೆ ಹಾಗೂ ಇತರೇ ಸಿವಿಲ್ ಪ್ರಕರಣಗಳು ಸೇರಿದಂತೆ ಎಲ್ಲಾ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಇದರಿಂದ ಹಣ, ಸಮಯ ಉಳಿತಾಯವಾಗಲಿದ್ದು, ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದೆ ಎಂದರು.
ಲೋಕ್ ಅದಾಲತ್ ನಲ್ಲಿ ಜನರಿಗೆ ಸುಲಭವಾಗಿ, ವೇಗವಾಗಿ ಮತ್ತು ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಲಾಗುತ್ತದೆ. ಇದರಿಂದ ನ್ಯಾಯಾಲಯದ ಮೇಲಿನ ಹೊರೆ ಇಳಿಕೆಯಾಗಲಿದೆ. ಅಧಿಕ ಕಾಲದಿಂದ ಬಾಕಿ ಇರುವ ಪ್ರಕರಣಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 35,533 ಬಾಕಿ ಪ್ರಕರಣಗಳಲ್ಲಿ ಡಿ.13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 8,961 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಗುರುತಿಸಲಾಗಿದೆ.
ಅದರಲ್ಲಿ 4,178 ಪ್ರಕರಣಗಳ ಉಭಯ ಕಕ್ಷಿದಾರರು ರಾಜಿ ಮಾತುಕತೆಯ ಮೂಲಕ ಇತ್ಯರ್ಥಕ್ಕೆ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";