ರಾತ್ರೋ ರಾತ್ರಿ ನೂತನ ಪೊಲೀಸ್ ಆಯುಕ್ತರ ನೇಮಕ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕೂಡಲೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ (Bengaluru Police Commissioner) ಅವರನ್ನು ನೇಮಕ ಮಾಡಿದೆ.
ನಿನ್ನೆ ತಡರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಕಾಲ್ತುಳಿತ ಘಟನೆಗೆ ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಗರ ಪೊಲೀಸ್ ಆಯುಕ್ತರ ತಲೆದಂಡವಾಗಿದ್ದು, ಬೆಂಗಳೂರಿನ 39ನೇ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ತಡರಾತ್ರಿ ನೂತನ ಕಮಿಷನರ್ ಅಧಿಕಾರ ಸ್ವೀಕಾರ
ಬೆಂಗಳೂರಿನ 39ನೇ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ತಡರಾತ್ರಿ 12.15ಕ್ಕೆ ಸಹಿ ಮಾಡುವ ಮೂಲಕ ಅಧಿಕಾರ ಸ್ವೀಕರಿಸಿದರು. ನೂತನ ಕಮಿಷನರ್ ಸೀಮಂತ್ ಕುಮಾರ್ ಅವರನ್ನು ಹಿರಿಯ ಅಧಿಕಾರಿಗಳು, ಡಿಸಿಪಿಗಳು ಸ್ವಾಗತಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ನಗರದ ಅಧಿಕಾರಿಗಳ ಜೊತೆ ಕಮಿಷನರ್ ಕಿರು ಸಭೆ ನಡೆಸಿದರು.
ಕಠಿಣ ಪರಿಸ್ಥಿತಿಯಲ್ಲಿ ಅಧಿಕಾರ ಸ್ವೀಕರಿಸಿದ್ದೇನೆ
ಅಧಿಕಾರ ಸ್ವೀಕರಿಸಿದ ಬಳಿಕ ಮಾತಾಡಿದ ನೂತನ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಆದೇಶದ ಮೇಲೆ ಅಧಿಕಾರ ಸ್ವೀಕರಿಸಿದ್ದೀನೆ. ಇಂಥಹ ಕಠಿಣ ಪರಿಸ್ಥಿತಿಯಲ್ಲೂ ಕೂಡ ಅಧಿಕಾರ ಸ್ವೀಕರಿಸಿದ್ದು, ಹಿಂದಿನ ಕಮಿಷನರ್ ಉತ್ತಮ ಕೆಲಸ ಮಾಡಿದ್ದಾರೆ. ಅದನ್ನ ಮುಂದುವರೆಸಿಕೊಂಡು ಹೋಗುತ್ತೇನೆ ಎಂದರು.