ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಇದೀಗ ಮಾಜಿ ಸಂಸದ ಎಲ್.ಆರ್. ಶಿವರಾಮೆಗೌಡ ವಿರುದ್ಧ ತಿರುಗಿಕೊಂಡಿದೆ. ಬಿಜೆಪಿ ಮುಖಂಡ, ಪೆನ್ ಡ್ರೈವ್ ಹಂಚಿಕೆ ವಿಚಾರದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ವಕೀಲ ದೇವರಾಜೇಗೌಡರ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಶಿವರಾಮೇಗೌಡ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಜೆಡಿಎಸ್ ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದ ಕುವೆಂಪು ಪ್ರತಿಮೆ ಬಳಿ ಪ್ರತಿಭಟನೆ ನಡೆಸಿತು.
![](https://kannadanadunews.in/wp-content/uploads/2023/09/veveeshk_hd-deve-gowda-pti-_625x300_23_March_19-1024x630.webp)
ಬೆಂಗಳೂರು ಮಹಾನಗರ ಜೆಡಿಎಸ್ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಿವರಾಮೇಗೌಡ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲು ಶಿವರಾಮೇಗೌಡರಿಗೆ ಡಿ.ಕೆ.ಶಿವಕುಮಾರ್ ಕುಮಕ್ಕು ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಶಿವರಾಮೇಗೌಡ ಹಾಗೂ ಶಿವಕುಮಾರ್ ವಿರುದ್ಧ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸಲಾಯಿತು.
ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ಗೌಡ, ಪಕ್ಷದ ಮುಖಂಡರಾದ ಟಿ.ಎನ್.ಜವರಾಯಿಗೌಡ, ಗೋಪಾಲ್, ರೇವಣ್ಣ, ಶೈಲಾ, ಕನ್ಯಾಕುಮಾರಿ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಲ್ಲದೆ ಶಿವರಾಮೇಗೌಡರ ಪ್ರತಿಕೃತಿ ದಹಿಸಲಾಯಿತು.
ವಕೀಲ ದೇವರಾಜೇಗೌಡರೊಂದಿಗೆ ದೂರವಾಣಿಯಲ್ಲಿ ಮಾತನಾಡುವಾಗ ಶಿವರಾಮೇಗೌಡ ಅವರು ದೇವೇಗೌಡರ ಬಗ್ಗೆ ಅವಹೇಳನಕಾರಿ ರೀತಿ ಮಾತನಾಡಿರುವುದನ್ನು ಖಂಡಿಸಲಾಯಿತು.