ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಬಹಿರಂಗ ಚರ್ಚೆಗೆ ಬನ್ನಿಎಂದು ಡಿಕೆ.ಶಿವಕುಮಾರ್’ಗೆ ತೇಜಸ್ವಿ ಸೂರ್ಯ ಸವಾಲು!
ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು.
ಬೆಂಗಳೂರು: ಬೆಂಗಳೂರು ಸುರಂಗ ರಸ್ತೆ ಯೋಜನೆ ಸಂಬಂಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಆಡಳಿತಾರೂಢ ಕಾಂಗ್ರೆಸ್ ನಡುವಿನ ವಾಕ್ಸಮರ ತೀವ್ರಗೊಂಡಿದೆ.
ಬೆಂಗಳೂರು ಸುರಂಗ ರಸ್ತೆ ಯೋಜನೆ ವಿಚಾರವಾಗಿ ಈ ಹಿಂದೆ ಮಾತನಾಡಿದ್ದ ತೇಜಸ್ವಿ ಸೂರ್ಯ ಅವರು, ಯೋಜನೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಆರೋಪಿಸಿದ್ದರು.
ಇದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್, ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಹೇಳಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ ಅವರು, ಯೋಜನೆ ಸಂಬಂಧ ಬಹಿರಂಗ ಚರ್ಚೆಗೆ ಬರುವಂತೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವರು, ಸುರಂಗ ರಸ್ತೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ ಮತ್ತು ಸಾರ್ವಜನಿಕ ಚರ್ಚೆಗೆ ನೀವು ನಿಜಕ್ಕೂ ಮುಕ್ತರಾಗಿದ್ದರೆ, ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಪ್ರಸ್ತಾಪಿಸುತ್ತಿದ್ದೇನೆ. ಸಮಯ ಮತ್ತು ಸ್ಥಳವನ್ನು ನೀವೇ ನಿಗದಿ ಮಾಡಿ. ಒಳಿತು ಕೆಡುಕುಗಳನ್ನು ಆರೋಗ್ಯಕರ ರೀತಿಯಲ್ಲಿ ಚರ್ಚಿಸುವುದು ಖಂಡಿತವಾಗಿಯೂ ಪ್ರಯೋಜನಕಾರಿಯಾಗಿದೆ. ನಿಮ್ಮಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ