ತೆನೆಹೊತ್ತ ಮಹಿಳೆಯೇ ಹೋಮ ಕುಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿರುವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ರಾಜ್ಯ ಕಾಂಗ್ರೆಸ್ ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ನಿಮ್ಮ ಬಾಯಲ್ಲಿ ಇರುವುದು ನಾಲಗೆಯೋ ಅಥವಾ ಕೊಳಕ ಮಂಡಲ ಹಾವೋ, ಜಾತ್ಯಾತೀತತೆ ನಾಟಕಕ್ಕೆ ಬೆರಗಾಗಿ ತೆನೆಹೊತ್ತ ಮಹಿಳೆಯೇ ಹೋಮ ಕುಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿರುಗೇಟು ನೀಡಿದೆ.

ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ರಾಜ್ಯ ಕಾಂಗ್ರೆಸ್ ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣ ಮಂಥರೆ, ಮಹಾಭಾರತದ ಶಕುನಿಯೇ ಸರಿ ಎಂದು ವಾಗ್ದಾಳಿ ನಡೆಸಿದೆ.
ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೊಕುಳಿ ಆಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ. ನಿಮ್ಮ ಹಿಂದಿನ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರ ಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯಾತೀತ ನಾಟಕಕ್ಕೆ ಬೆರಗಾಗಿ ತೆನೆಹೊತ್ತ ಮಹಿಳೆಯೇ ಹೋಮ ಕುಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಹೇಳಿದೆ.
ಕಾಂಗ್ರೆಸ್ ದಯಾ ಭಿಕ್ಷೆಯಿಂದ 2ನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ, ಆತ್ಮಸಾಕ್ಷಿ ಮಾಡಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂಥವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಅಧಿಕಾರದ ಕನಸು ನುಚ್ಚು ನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿ ಭ್ರಮ್ಷಗಿದ್ದೀರಿ ಎಂಬುದು ರಾಜ್ಯದ ಜನತೆಗೆ ಅರ್ಥವಾಗಿದೆ. ನಿಮ್ಮ ಸ್ಥಿತಿ ಕಂಡು ಅಯ್ಯೋ ಅನಿಸುತ್ತಿದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ ಎಂದು ಕಾಂಗ್ರೆಸ್ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಗೇಲಿ ಮಾಡಿದೆ.
ಇಷ್ಟು ದಿನ ನಿಮ್ಮನ್ನು, ನಿಮ್ಮ ಕುಟುಂಬದವರನ್ನು ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದರೇ ಹೊರತು, ನಿಮ್ಮಿಂದ ಸಮುದಾಯ ಉದ್ಧಾರವಾಗಿಲ್ಲ. ಒಕ್ಕಲಿಗರ ಆತ್ಮ ಗೌರವದ ಸಂಕೇತವಾದ ಆದಿಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳಿಗೆ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರು ನೀವಲ್ಲವೇ ಎಂದು ಕಾಂಗ್ರೆಸ್ ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದೆ.
ಐಟಿ-ಇಡಿ ಕಿಂದರಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ, ನೀವೇ ನಿಮ್ಮ ಪಾಲಿನ ಭಸ್ಮಾಸುರ, ಸ್ವಲ್ವ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ನೀವೇ ಬಿದ್ದು ಒದ್ದಾಡುತ್ತೀರಾ ಎಂದು ಕಾಂಗ್ರೆಸ್ ಹೇಳಿದೆ.
ನಿಯತ್ತು ಮತ್ತು ಕುಮಾರಸ್ವಾಮಿ ಎರಡು ವಿರುದ್ಧ ಪದಗಳು. ನಿಮ್ಮಂಥವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ. ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತನಾಡುತ್ತಾ ಹೋಗಿ, ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ. ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ-ಬೀದಿಯಲ್ಲಿ ಹೋಗುವವರಿಗೆಲ್ಲಾ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top