ಬೆಳಗಾವಿ/ಬಳ್ಳಾರಿ, : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ತುಂಗಭದ್ರ ಜಲಾಶಯಕ್ಕೆ ಸಮಾ ನಾಂತರವಾಗಿ ನವಲಿ ಜಲಾಶಯ ನಿರ್ಮಾಣಕ್ಕಾಗಿ 1000 ಕೋಟಿ ರೂಪಾಯಿ ಅನುದಾನವನ್ನು ಮೀಸಲು ಮಾಡಿದ್ದರು, ಕಾರಣ ನವಲಿ ಸಮಾನಾಂತರ ಜಲಾಶಯದ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಬಳ್ಳಾರಿ – ವಿಜಯನಗರ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ, ಶಾಸಕ ವೈ.ಎಂ. ಸತೀಶ್ ಅವರು ಆಗ್ರಹಿಸಿದ್ದಾರೆ. ಬೆಳಗಾವಿಯ `ಸುವರ್ಣ ಸೌಧ’ದಲ್ಲಿ ಶುಕ್ರವಾರ ಈ ವಿಷಯವನ್ನು ಪ್ರಸ್ತಾಪಿಸಿದ ವೈ.ಎಂ. ಸತೀಶ್ ಅವರು, ತುಂಗಭದ್ರ ಜಲಾಶಯಕ್ಕೆ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಮಾಡಿ, ಭವಿಷ್ಯದಲ್ಲಿ ಅಕಾಲಿಕ ಮಳೆ ಮತ್ತು ನೀರಾವರಿಗೆ ನೀರಿನ ಕೊರತೆ ಆಗುವ ಸಮಸ್ಯೆಯನ್ನು ತಪ್ಪಿಸಲು ಪ್ರಯತ್ನಿಸಬೇಕು. ಆದರೆ, ಬಳ್ಳಾರಿ, ಬಳ್ಳಾರಿ ಗ್ರಾಮಾಂತರ – ಸಿರುಗುಪ್ಪ ಮತ್ತು ವಿಜಯನಗರ ವ್ಯಾಪ್ತಿಯಲ್ಲಿ ಎರಡನೇ ಬೆಳೆಗೆ 6 ರಿಂದ 7 ಟಿಎಂಸಿ (6.80 ಟಿಎಂಸಿ) ಪ್ರಮಾಣದ ನೀರನ್ನು ಹರಿಸಲು ಸಾಧ್ಯವಿತ್ತು. ಆದರೆ, ಸಾಧ್ಯವಾಗಿಲ್ಲ.
ಹಗರಿಬೊಮ್ಮನಹಳ್ಳಿ – ಕೊಟ್ಟೂರು; ಸಂಡೂರು ತಾಲೂಕಿನಲ್ಲಿ ಕೆರೆ ತುಂಬಿಸುವ ಕೆಲಸವನ್ನು ಮಾಡಬೇಕಿದೆ. ಪಾವಗಡಕ್ಕೆ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ಮಾರ್ಗಮಧ್ಯದಲ್ಲಿ ಬರುವ ಕೊಟ್ಟೂರಿಗೆ ನೀರು ಪೂರೈಸಲು ಸಾಧ್ಯವಾಗಿಲ್ಲ. ಕಂಪ್ಲಿಯಲ್ಲಿ ಭಾಗಶಃ ಕೆರೆ ತುಂಬಿಸುವ ಕೆಲಸ ಮಾಡಬೇಕು. ನೀರು ನಿರ್ವಹಣೆ ಮತ್ತು ಸಂರಕ್ಷಣೆ ಕುರಿತು ಜನಸಾಮಾನ್ಯರಿಗೆ – ರೈತರಿಗೆ ಜಾಗೃತಿ ಮೂಡಿಸಬೇಕಿದೆ. ಇಲ್ಲವಾದಲ್ಲಿ ಕೃಷಿ ಸಂಕಷ್ಟಕ್ಕೆ ಗುರಿಯಾಗಿ, ರೈತರು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕಾರಣ, ತುಂಗಭದ್ರ ಜಲಾಶಯಕ್ಕೆ ಸಮಾನಾಂತರವಾಗಿ ನವಿಲೆ ಸಮಾನಾಂತರ ಜಲಾಶಯವನ್ನು ತ್ವರಿತವಾಗಿ ನಿರ್ಮಾಣ ಮಾಡಲು ಸರ್ಕಾರ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.



